ದ.ಕ.: 3ನೆ ದಿನಕ್ಕೆ ಕಾಲಿಟ್ಟ ಪೌರ ಕಾರ್ಮಿಕರ ಮುಷ್ಕರ
ಮಂಗಳೂರು: ಜಿಲ್ಲೆಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರು, ವಾಹನ ಚಾಲಕರು, ಸೂಪರ್ವೈಸರ್ಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನಡೆಸುತ್ತಿರುವ ಮುಷ್ಕರ ಇಂದು ಮೂರನೆ ದಿನಕ್ಕೆ ಕಾಲಿಟ್ಟಿದೆ.
ರವಿವಾರವಾದ ಇಂದು ಕೂಡಾ ಜಿಲ್ಲಾಧಿಕಾರಿಕಚೇರಿ ಎದುರು ಪೌರ ಕಾರ್ಮಿಕರು ಮುಷ್ಕರ ಮುಂದುವರಿಸಿದರು. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದ್ಯಂತ ಈ ಮುಷ್ಕರ ನಡೆಯುತ್ತಿದ್ದು, ದ.ಕ. ಜಿಲ್ಲೆಯಲ್ಲೂ ನಡೆಯುತ್ತಿರುವ ಮುಷ್ಕರದಲ್ಲಿ ಪೌರ ಕಾರ್ಮಿಕರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಭಾಗವಹಿಸುತ್ತಿದ್ದಾರೆ.
ಈಗಾಗಲೇ ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯಾದಿಯಾಗಿ ಮುಷ್ಕರ ನಿರತರಿಗೆ ಬೇಡಿಕೆ ಈಡೇರಿಸುವ ಭರವಸೆಗಳನ್ನು ನೀಡಲಾಗುತ್ತಿದೆ. ಆದರೆ ಲಿಖಿತ ಭರವಸೆ ದೊರೆಯುವವರೆಗೆ ಮುಷ್ಕರ ನಡೆಸಲು ನಿರ್ಧರಿಸಲಾ ಗಿದ್ದು, ನಾಳೆಯೂ ಮುಷ್ಕರ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ದ.ಕ. ಜಿಲ್ಲಾ ಪೌರ ಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಹಾಗೂ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ಪಿ. ಆನಂದ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಚೇರಿ ಎದುರು ಇಂದು ಮುಷ್ಕರ ನಿರತರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ನ ಮಾಜಿ ಸದಸ್ಯ ಐವನ್ ಡಿಸೋಜಾ ಭೇಟಿ ನೀಡಿ ಬೆಂಬಲ ಸೂಚಿಸಿದರು.