ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದಿಂದ ‘ಅಮೃತ ಸಾಂಸ್ಕೃತಿಕ ಸಂವಹನ’ ಕಾರ್ಯಕ್ರಮ
ಮಂಗಳೂರು : ಶಿಕ್ಷಣ ಸಂಸ್ಥೆಗಳಲ್ಲಿ ಪಠ್ಯ ವಿಷಯಗಳೊಂದಿಗೆ ರಾಷ್ಟ್ರೀಯ ಜಾಗೃತಿ ಕಾರ್ಯಕ್ರಮಗಳಿಗೂ ಅವಕಾಶ ನೀಡಬೇಕು. ಇದರಿಂದ ಯುವ ಸಮುದಾಯದಲ್ಲಿ ಸಂಸ್ಕೃತಿ ಮತ್ತು ಪರಂಪರೆಗಳನ್ನು ಅರ್ಥ ಮಾಡಿಕೊಳ್ಳುವ ಮನೋಭಾವ ಬೆಳೆಯುತ್ತದೆ. ಎಲ್ಲರನ್ನೂ ಸಮಾನವಾಗಿ ಕಾಣುವ ಭಾವೈಕ್ಯತೆಗೆ ಅದು ಕಾರಣವಾಗುವುದು’ ಎಂದು ಮಂಗಳೂರು ಮೀನುಗಾರಿಕಾ ಮಹಾ ವಿದ್ಯಾಲಯದ ನಿವೃತ್ತ ಡೀನ್ ಡಾ.ಎಸ್.ಎಂ. ಶಿವಪ್ರಕಾಶ್ ಹೇಳಿದ್ದಾರೆ.
ಭಾರತ ಸ್ವಾತಂತ್ರ್ಯದ ಅಮೃತೋತ್ಸವ ಸಂದರ್ಭ ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಭಾರತೀ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ಜರಗಿದ ’ಅಮೃತ ಸಾಂಸ್ಕೃತಿಕ ಸಂವಹನ’ ಕಾರ್ಯಕ್ರಮದ ಅವರು ಉಪನ್ಯಾಸ ನೀಡಿದರು.
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್ದಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯೆ ಗಂಗಾರತ್ನ ಮುಗುಳಿ ಮತ್ತು ಗೋರಿಗುಡ್ಡೆ ಕಿಟ್ಟೆಲ್ ಮೆಮೋರಿಯಲ್ ಪ್ರೌಢಶಾಲಾ ಶಿಕ್ಷಕ ಕೃಷ್ಣ ಎನ್. ಅತಿಥಿಗಳಾಗಿ ಭಾಗವಹಿಸಿದ್ದರು. ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಕೋಶಾಧಿಕಾರಿ ಪಿ.ಡಿ.ಶೆಟ್ಟಿ ವಂದಿಸಿದರು. ಸಂಘಟನಾ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ಸಂಯೋಜಿಸಿದರು. ಪ್ರತಿಷ್ಠಾನದ ಪದಾಧಿಕಾರಿಗಳಾದ ವಿಜಯಲಕ್ಷ್ಮಿ ಬಿ.ಶೆಟ್ಟಿ, ನಮಿತಾ ಶ್ಯಾಂ, ಸುಮಾ ಪ್ರಸಾದ್, ಸತೀಶ್ ಸುರತ್ಕಲ್, ದೀಪಕ್ ರಾಜ್ ಉಳ್ಳಾಲ್, ನಿರ್ಮಲ್ ಭಟ್ ಕೊಣಾಜೆ ಉಪಸ್ಥಿತರಿದ್ದರು.