ಬೆಳ್ತಂಗಡಿ ಬಳಿ ರಸ್ತೆ ಅಪಘಾತ: ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಸಹಿತ ಇಬ್ಬರು ಮೃತ್ಯು
ಬೆಳ್ತಂಗಡಿ, ಜ.1: ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ(44) ಸಹಿತ ಇಬ್ಬರು ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ.
ಕಾರು ಚಾಲಕ, ಉಳಾಯಿಬೆಟ್ಟು ನಿವಾಸಿ ಮುಷರಫ್ ಎಂಬವರು ಕೂಡಾ ಮೃತಪಟ್ಟಿದ್ದಾರೆ.
ಕಾರು ಹಾಗೂ ಬಸ್ಸು ಮುಖಾಮುಖಿ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೂಲತಃ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದ ನೌಶಾದ್ ಹಾಜಿ ಸೂರಲ್ಪಾಡಿಯವರು ಪ್ರಸಕ್ತ ಗಂಜಿಮಠದ ಸೂರಲ್ಪಾಡಿಯಲ್ಲಿ ನೆಲೆಸಿದ್ದರು. ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿದ್ದ ಅವರು ನಂಡೆ ಪೆಂಙಳ್ ಅಭಿಯಾನದ ಸ್ಥಾಪಕಾಧ್ಯಕ್ಷರಾಗಿದ್ದರು. ಬೆಳ್ತಂಗಡಿಯ ದಾರುಸ್ಸಲಾಂ ಎಜ್ಯುಕೇಶನ್ ಸೆಂಟರ್ ಕೋಶಾಧಿಕಾರಿಯಾಗಿ, ಮೂಡುಬಿದಿರೆ ಕಾಶಿಪಟ್ಣದ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾರ್ಯದರ್ಶಿಯಾಗಿ, ಗುರುಪುರ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ವಿವಿಧ ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅಪಘಾತಕ್ಕೆ ಬಲಿಯಾದ ಕಾರು ಚಾಲಕ ಮುಷರಫ್ ಉಳಾಯಿಬೆಟ್ಟು ನಿವಾಸಿ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.