ಸತ್ಯಜಿತ್ ಸುರತ್ಕಲ್ಗೆ ನೀಡಿದ್ದ ಗನ್ಮ್ಯಾನ್ ವಾಪಸ್
ಮಂಗಳೂರು, ಮಾ.31: ಸಂಘಪರಿವಾರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಮತ್ತು ಇತ್ತೀಚಿನ ದಿನಗಳಲ್ಲಿ ಬಿಜೆಪಿ ಹಾಗೂ ಸರಕಾರದ ಕಾರ್ಯವೈಖರಿಯ ವಿರುದ್ಧ ಬಹಿರಂಗವಾಗಿ ಧ್ವನಿ ಎತ್ತುತ್ತಿರುವ, ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ಗೆ ನೀಡಿದ್ದ ಗನ್ಮ್ಯಾನ್ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಬಾಬರಿ ಮಸೀದಿ ಪ್ರಕರಣ ಮತ್ತು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿದ ಬಳಿಕ ಸತ್ಯಜಿತ್ ಸುರತ್ಕಲ್ಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿತ್ತು.
ಕಳೆದ ಬಾರಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈ ತಪ್ಪಿದ ಬಳಿಕ ಪಕ್ಷ ಮತ್ತು ಸಂಘ ಪರಿವಾರದ ಚಟುವಟಿಕೆಗಳಲ್ಲಿ ಅಂತರ ಕಾಯ್ದುಕೊಂಡಿದ್ದರು. ಅಲ್ಲದೆ ಬಿಲ್ಲವ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಶ್ರೀ ನಾರಾಯಣಗುರು ವಿಚಾರ ವೇದಿಕೆಯ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದ್ದರು. ಅಲ್ಲದೆ ಬಿಜೆಪಿ ನಾಯಕರು ಮತ್ತು ಸರಕಾರದ ವಿರುದ್ಧದ ಟೀಕಾಕಾರರಲ್ಲಿ ಪ್ರಮುಖರಾಗಿದ್ದರು.