ಮಂಗಳೂರು: ಸಂಘಪರಿವಾರದ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದಿಂದ ಪ್ರತಿಭಟನೆ
ಮಂಗಳೂರು,ಮಾ.15: ಮೈಸೂರಿನಲ್ಲಿ ಸಂಘಪರಿವಾರದ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದಿಂದ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಂದಿನಿಂದ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ರಾಜ್ಯ ಅಲ್ಪಸಂಖ್ಯಾತರ ತುಷ್ಟಿಕರಣ ಮಾಡಿ ಬಹುಸಂಖ್ಯಾತರ ವಿರೋಧಿ ಧೋರಣೆ ಹೊಂದಿರುವುದು ಇದಕ್ಕೆ ಕಾರಣವೆಂದು ಹೇಳಿದರು.
ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರಾಜ್ಯದಲ್ಲಿ ಹಿಂದೂಗಳಿಗೆ ಬದುಕಲು ಅವಕಾಶವಿಲ್ಲದಂತಾಗಿದೆ. ಹತ್ಯೆಗೀಡಾದ ರಾಜು ಕುಟುಂಬಕ್ಕೆ ರಾಜ್ಯ ಸರಕಾರವು 25 ಲಕ್ಷ ಪರಿಹಾರವನ್ನು ನೀಡಬೇಕು ಮತ್ತು ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ವಿ.ಹಿಂ.ಪ. ಮುಖಂಡರುಗಳಾದ ಜಗದೀಶ್ ಶೇಣವ, ಗೋಪಾಲ್ ಕುತ್ತಾರ್, ಬಜರಂಗದಳ ಮುಖಂಡರುಗಳಾದ ಪ್ರವೀಣ್ ಕುತ್ತಾರ್, ಶಿವಾನಂದ್ ಮೆಂಡನ್, ಮನೋಹರ್ ಸುವರ್ಣ ದಿನೇಶ್ ಕುಂಪಲ ಮೊದಲಾದವರು ಉಪಸ್ಥಿತರಿದ್ದರು.