ಜನತೆ ನಿಮ್ಮಿಂದ ಇದನ್ನು ಬಯಸುವುದಿಲ್ಲ: ಸಂಸದ ನಳಿನ್ ವಿರುದ್ಧ ಬಿಜೆಪಿ ನಾಯಕ ಸುರೇಶ್ ಕುಮಾರ್ ಆಕ್ರೋಶ
ಮಂಗಳೂರು, ನ.9: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ನೀಡಿದ್ದಾರೆ ಎನ್ನಲಾದ ಹೇಳಿಕೆಯೊಂದನ್ನು ಬಿಜೆಪಿ ಶಾಸಕ, ಹಿರಿಯ ನಾಯಕ ಸುರೇಶ್ ಕುಮಾರ್ ಖಂಡಿಸಿದ್ದಾರೆ.
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮಂಗಳೂರಿನ ಡಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್, “ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಡೂ ಅಲ್ಲ, ಹೆಣ್ಣೂ ಅಲ್ಲ ಎಂದು ಹೇಳಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿತ್ತು. ಸಂಸದರ ಈ ಹೇಳಿಕೆಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು.
ಈ ಹಿಂದೆಯೂ ಸಹ ದ.ಕ. ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ ನೀಡಿದ್ದ ಸಂಸದ ನಳಿನ್ ವಿವಾದ ಸೃಷ್ಟಿಸಿದ್ದರು. ಇದೀಗ ಮುಖ್ಯಮಂತ್ರಿ ವಿರುದ್ಧ ನಳಿನ್ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸುರೇಶ್ ಕುಮಾರ್, ನಮ್ಮ ರಾಜ್ಯದಲ್ಲಿ ಈ ರೀತಿಯ ಭಾಷೆಯಿಂದ ಕೂಡಿದ ಮಾತುಗಳ ಸ್ಪರ್ಧೆ ನಡೆದಿರುವುದು ಅತ್ಯಂತ ದುರದೃಷ್ಟಕರ, ಬಿಜೆಪಿಯ ಸಂಸದರಿಂದ ಇದನ್ನು ಜನತೆ ಬಯಸುವುದಿಲ್ಲ” ಎಂದಿದ್ದಾರೆ.
Next Story