ಮಂಗಳೂರು: ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿ, ಓರ್ವನಿಗೆ ಗಾಯ
ಮಂಗಳೂರು, ಜು.26: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಗಾಯಗೊಂಡ ಘಟನೆ ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಇಲ್ಲಿನ ರೀಗಲ್ ಪ್ಲಾಝಾ ಎಂಬ ವಾಣಿಜ್ಯ ಸಂಕೀರ್ಣದಲ್ಲಿರುವ ಹೋಟೆಲ್ ವೊಂದರಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹೋಟೆಲ್ ಅಡುಗೆ ಸಿಬ್ಬಂದಿ ಅಶ್ರಫ್ ಎಂಬವರು ಗಾಯಗೊಂಡಿದ್ದಾರೆ. ಬೆಳಗ್ಗೆ ಹೋಟೆಲ್ ತೆರೆದು ಅಡುಗೆ ಮಾಡಲು ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಕದ್ರಿ ಹಾಗೂ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ.
ಮಂಗಳೂರು ದಕ್ಷಿಣ, ಬಂದರ್ ಪೊಲೀಸರೂ ಕೂಡಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.