ಲಾಕ್ಡೌನ್ ಆದೇಶ ಪಾಲಿಸದಿದ್ದರೆ ಕಠಿಣ ಕ್ರಮ: ದ.ಕ. ಜಿಲ್ಲಾಧಿಕಾರಿ ಸಿಂಧೂ
ಮಂಗಳೂರು, ಮಾ. 23: ಕೊರೋನ ವೈರಸ್ ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಹರಡುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾದ್ಯಂತ ಮಾ.31ರವರೆಗೆ ಲಾಕ್ಡೌನ್ ಆದೇಶ ಮಾಡಲಾಗಿದೆ. ಇದನ್ನು ಪಾಲಿಸದಿದ್ದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿದ ಅವರು, ಜಿಲ್ಲೆಯಲ್ಲಿ ಲಾಕ್ಡೌನ್ ಮಾಡಿದರೂ ಅಂಗಡಿ ಮುಂಗಟ್ಟು ತೆರೆದಿದ್ದು, ಜನಸಂಚಾರವೂ ಹೆಚ್ಚಾಗಿದೆ. ಈ ಬಗ್ಗೆ ದೂರುಗಳು ಬರುತ್ತಿದೆ. ಈ ಆದೇಶವನ್ನು ಪ್ರತಿಯೊಬ್ಬರು ಗಂಭೀರವಾಗಿ ಪರಿಗಣಿಸಬೇಕು. ಲಾಕ್ಡೌನ್ ಒಂದು ದಿನದ ವಿಷಯವಲ್ಲ. ಒಂದು ದಿನ ಕರ್ಫ್ಯೂ ಮಾಡಿದರೆ ಪರಿಹಾರ ಸಾಧ್ಯವಾಗಲ್ಲ. ಸಾಮೂಹಿಕವಾಗಿ ಈ ರೋಗ ಹರಡಲು ಆರಂಭವಾದರೆ ಇದನ್ನು ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಹಾಗಾಗಿ ಪ್ರತಿಯೊಬ್ಬರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅನಗತ್ಯವಾಗಿ ಓಡಾಡುವುದನ್ನು ತಕ್ಷಣ ನಿಲ್ಲಿಸಬೇಕು. ಅಂಗಡಿ ಮುಂಗಟ್ಟು ಬಂದ್ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮಕೈಗೊಳ್ಳುವುದು ಅನಿವಾರ್ಯವಾದೀತು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.