ಕರಾವಳಿಯಾದ್ಯಂತ ಸರಳ ‘ಈದುಲ್ ಫಿತ್ರ್’ ಆಚರಣೆ
ಮಂಗಳೂರು, ಮೇ 24: ಕೊರೋನ-ಲಾಕ್ಡೌನ್ ಹಿನ್ನೆಲೆ ಮತ್ತು ಸರಕಾರದ ಆದೇಶದ ಮೇರೆಗೆ ರವಿವಾರ ಕರಾವಳಿಯ ಮುಸ್ಲಿಮರು ಅತ್ಯಂತ ಸರಳವಾಗಿ ಈದುಲ್ ಫಿತ್ರ್ ಹಬ್ಬ ಆಚರಿಸಿದರು.
ಮುಂಜಾನೆ ಎದ್ದು ಸ್ನಾನ ಮಾಡಿ, ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಪೂಸಿ, ಸಿಹಿತಿಂಡಿ ತಿಂದು ತಕ್ಬೀರ್ನ ಧ್ವನಿ ಮೊಳಗಿಸುತ್ತಾ ಸಾಲಾಗಿ ಮಸೀದಿ ಅಥವಾ ಈದ್ಗಾಗಳಿಗೆ ತೆರಳಿ ‘ಈದ್ ನಮಾಝ್’ ಮಾಡುವುದು, ಪರಸ್ಪರ ಆಲಿಂಗಿಸುವುದು, ಕ್ಷೇಮ ಸಮಾಚಾರ ಕೇಳಿಕೊಳ್ಳುವುದು, ಮಾತು ಬಿಟ್ಟವರನ್ನು ಹುಡುಕಿಕೊಂಡು ಹೋಗಿ ಮಾತನಾಡಿಸುವುದು, ಖಬರಸ್ಥಾನ ಸಂದರ್ಶಿಸುವುದು, ಸಾಮೂಹಿಕ ಝಿಯಾರತ್ ಮಾಡುವುದು, ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುವುದು, ಸಿಹಿತಿಂಡಿ ಹಂಚುವುದು, ಈದ್ ಹಣ ವಿತರಿಸುವುದು, ವಿಶೇಷ ಅಡುಗೆ ತಯಾರಿಸಿ ರುಚಿ ಸವಿಯುವುದು ಸಾಮಾನ್ಯವಾಗಿತ್ತು. ಆದರೆ ಲಾಕ್ಡೌನ್ನಿಂದಾಗಿ ಯಾರೂ ಮಸೀದಿಯತ್ತ ತೆರಳಲಿಲ್ಲ, ಖಬರಸ್ಥಾನ ಸಂದರ್ಶಿಸಲಿಲ್ಲ. ಸಾರ್ವಜನಿಕವಾಗಿ ತಕ್ಬೀರ್ ಮೊಳಗಿಸಲಿಲ್ಲ. ಕೆಲವರು ಲಾಕ್ಡೌನ್ ಮುಂಚೆಯೇ ಖರೀದಿಸಿದ್ದ ಹೊಸ ಬಟ್ಟೆಯನ್ನು ಧರಿಸಿದ್ದರೆ, ಇನ್ನ್ನು ಕೆಲವರು ಸಾದಾ ಬಟ್ಟೆ ಧರಿಸಿ ಸರಳತೆ ಮೆರೆದರು. ಈದ್ ಬಟ್ಟೆಬರೆಗಾಗಿ ಮೀಸಲಿಟ್ಟ ಹಣವನ್ನು ಸಾರ್ವಜನಿಕರಿಗೆ ಉಪಯುಕ್ತವಾಗುವ ವಸ್ತುಗಳ ಖರೀದಿಗೆ ಹಸ್ತಾಂತರಿಸಿದರು. ಅರ್ಹರ ಮನೆಗೆ ಫಿತ್ರ್ ಝಕಾತನ್ನು ತಲುಪಿಸಿದರು. ಒಟ್ಟಿನಲ್ಲಿ ಖಾಝಿಗಳ ಕರೆಯಂತೆ ಎಲ್ಲರೂ ಮನೆಯಲ್ಲೇ ಇದ್ದುಕೊಂಡು ಈದ್ ನಮಾಝ್ ಮಾಡಿ ಅತ್ಯಂತ ಸರಳವಾಗಿ ಹಬ್ಬ ಆಚರಿಸಿದರು.