ಮಂಗಳವಾರದಿಂದ ಮಣಿಪಾಲ ಕೆಎಂಸಿ ಆರು ದಿನ ಬಂದ್
ಉಡುಪಿ, ಜು.20: ನೋವೆಲ್ ಕೊರೋನ ವೈರಸ್ (ಕೋವಿಡ್-19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸ್ಯಾನಟೈಸ್ಗೊಳಿಸುವ ಸಲುವಾಗಿ ನಾಳೆಯಿಂದ (ಮಂಗಳವಾರ ಜು.21) ಒಟ್ಟು ಆರು ದಿನಗಳ ಕಾಲ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುತ್ತದೆ.
ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಜು.21ರ ಮಂಗಳವಾರದಿಂದ ಜು.26ರ ರವಿವಾರದವರೆಗೆ ಎಲ್ಲಾ ಹೊರರೋಗಿ ವಿಭಾಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಕೆಎಂಸಿ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.27ರ ಸೋಮವಾರದಿಂದ ಹೊರರೋಗಿ ವಿಭಾಗವು ಎಂದಿನಂತೆ ಸೇವೆ ಸಲ್ಲಿಸಲಿದೆ. ಉಡುಪಿ ಜಿಲ್ಲೆಯಲ್ಲಿ ಕೊರೋನ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು ಮತ್ತು ಕಳೆದ ಕೆಲವು ದಿನಗಳಿಂದ ನಮ್ಮ ಅನೇಕ ಆರೋಗ್ಯ ಕಾರ್ಯಕರ್ತರು ಕೋವಿಡ್ ಸೋಂಕಿಗೆ ತುತ್ತಾಗುತ್ತಿರುವುದನ್ನು ಗಮನಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಅವಧಿಯಲ್ಲಿ ಇಡೀ ಆಸ್ಪತ್ರೆಯನ್ನು ಸ್ವಚ್ಛಗೊಳಿಸಲಾಗುವುದು ಹಾಗೂ 200 ಕೋವಿಡ್-19 ಹಾಸಿಗೆಯನ್ನು ಸಿದ್ಧಪಡಿಸಲಾಗುತ್ತದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹೊರರೋಗಿ ವಿಭಾಗವನ್ನು ಮುಚ್ಚುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆದರೂ ಸಹ ಆಸ್ಪತ್ರೆಯ ಆಡಳಿತ ಮಂಡಳಿ ಜನರಿಗೆ ವೈದ್ಯಕೀಯ ಸಮಾಲೋಚನೆಯನ್ನು ನೀಡುವ ಉದ್ದೇಶದಿಂದ ಇಂದಿನಿಂದ (ಜು.20) ವೀಡಿಯೊ ಸಮಾಲೋಚನಾ ಸೌಲಭ್ಯವನ್ನು ಪ್ರಾರಂಭಿ ಸಲಾಗಿದೆ.
ಈ ಸೇವೆಯಡಿಯಲ್ಲಿ ಜನರು ತಮ್ಮ ಮನೆಯಲ್ಲಿ ಕುಳಿತು ವೈದ್ಯರನ್ನು ಸಂಪರ್ಕಿಸಬಹುದು. ವೈದ್ಯರು ದೂರವಾಣಿ ಮೂಲಕ ಅಥವಾ ವೀಡಿಯೋ ಕರೆ ಮೂಲಕ ಸಮಾಲೋಚನೆ ಮತ್ತು ವೈದ್ಯಕೀಯ ಸಲಹೆಯನ್ನು ನೀಡಲಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9:00ರಿಂದ ಸಂಜೆ 4:00ರವರೆಗೆ ದೂರವಾಣಿ ಕರೆ ಮಾಡುವುದರ ಮೂಲಕ ಎಲ್ಲಾ ವಿಭಾಗದ ವೈದ್ಯರನ್ನು ವೀಡಿಯೊ ಸಮಾಲೋಚನೆ ಮೂಲಕ ಸಂಪರ್ಕಿಸಬಹುದು. ಸಂಪರ್ಕಿಸಲು 08047192235ಗೆ ಕರೆ ಮಾಡಬಹುದು ಎಂದು ಪ್ರಕಟಣೆ ವಿವರಿಸಿದೆ.
ಆದರೆ ಆಸ್ಪತ್ರೆಯ ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿದೆ ಎಂದು ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.