ಮೂಡುಬಿದಿರೆ: ಹತ್ರಸ್ ಪ್ರಕರಣ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಮೂಡುಬಿದಿರೆ, ಅ.21:ಪ್ರಧಾನಿ ಮೋದಿಗಾಗಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗಾಗಲಿ ಹೆಣ್ಮಕ್ಕಳ ಕಷ್ಟ ಅರ್ಥವಾಗುತ್ತಿಲ್ಲ. ಯಾಕೆಂದರೆ ಅವರಿಬ್ಬರೂ ಸಂಸಾರಿಗಳಲ್ಲ. ಹಾಗಾಗಿ ದೆಶದಲ್ಲಿ ಹೆಣ್ಮಕ್ಕಳ ಮೇಲಿನ ಹಿಂಸೆ ಹೆಚ್ಚಾಗುತ್ತಿದೆ. ಅತ್ಯಾಚಾರಿಗಳಿಗೆ ಸಾರ್ವಜನಿಕವಾಗಿ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಬರಬೇಕು ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.
ಉತ್ತರ ಪ್ರದೇಶದ ಹತ್ರಸ್ ಪ್ರಕರಣವನ್ನು ಖಂಡಿಸಿ ಮೂಡುಬಿದಿರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಬುಧವಾರ ಮೂಡುಬಿದಿರೆ ತಾಲ್ಲೂಕು ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಮಹಿಳೆಯರನ್ನು ಮಾತೆಗೆ ಹೋಲಿಸುತ್ತಿದೆ. ಆದರೆ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಸೇರಿದಂತೆ ಇತರ ರಾಜ್ಯಗಳಲ್ಲಿ ಮಹಿಳೆಯರ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ ಎಂದು ಶಕುಂತಳಾ ಶೆಟ್ಟಿ ತಿಳಿಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷೆ ಮಮತ ಗಟ್ಟಿ, ಮೂಡುಬಿದಿರೆ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಮತ್ತಿತರರು ಪಾಲ್ಗೊಂಡಿದ್ದರು.