ಉಡುಪಿ : ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಬಿಜೆಪಿ ಸಭೆ
ಉಡುಪಿ, ಅ. 27: ಕಳೆದ ಸುಮಾರು ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಉಡುಪಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯ ದಿನ ನಿಗದಿಯಾದಂತೆ, ಉಡುಪಿ ನಗರಸಭೆಯಲ್ಲಿ ಬಹುಮತವನ್ನು ಹೊಂದಿರುವ ಬಿಜೆಪಿ ತನ್ನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಇಂದು ಪೂರ್ವ ಭಾವಿ ಸಭೆ ನಡೆಸಿತು.
ಉಡುಪಿ ನಗರಸಭಾ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಎ’ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಅಧಿಸೂಚನೆಯಾಗಿದೆ. 35 ಸದಸ್ಯರ ಉಡುಪಿ ನಗರಸಭೆಯಲ್ಲಿ ಬಿಜೆಪಿಯ 31 ಸದಸ್ಯರು ಜನರಿಂದ ಚುನಾಯಿತರಾಗಿದ್ದು, ಸಂಪೂರ್ಣ ಬಹುಮತ ಹೊಂದಿದೆ. ಕೇವಲ ನಾಲ್ಕು ಸ್ಥಾನ ಕಾಂಗ್ರೆಸ್ ಪಾಲಾಗಿದೆ.
ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಮಾತನಾಡಿದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಪಂ ಅಧ್ಯಕ್ಷ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿ ಅಮೀನ್, ಯಶ್ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಮನೋಹರ ಕಲ್ಮಾಡಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರಸಭೆಯ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಮಾಜಿ ನಗರಸಭಾ ಸದಸ್ಯ ಮೋಹನ್ ಉಪಾಧ್ಯ ಹಾಗೂ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
ಸುಮಿತ್ರಾ ನಾಯಕ್ಗೆ ಸಹಮತ ?
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಯ್ಕೆಗಿದ್ದ ಎಲ್ಲಾ ತಡೆಗಳು ನಿವಾರಣೆಗೊಂಡು ನ್ಯಾಯಾಲಯ ನ.2ರೊಳಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಹಸಿರುನಿಶಾನೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಮಾಡುವ ಕುರಿತು ಬಿಜೆಪಿ ಪಕ್ಷದ ಪೂರ್ವಭಾವಿ ಸಭೆ ಇಂದು ನಡೆಯಿತು.
ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪರ್ಕಳ ವಾರ್ಡಿನಿಂದ ಮೂರು ಬಾರಿ ಗೆದ್ದಿರುವ ಹಿರಿಯ ಸದಸ್ಯೆ ಸುಮಿತ್ರಾ ಆರ್.ನಾಯಕ್ ಅವರ ಹೆಸರಿಗೆ ಸಹಮತ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.