ಕೋವಿಡ್ ಲಸಿಕೆ ನೀಡಲು ಡೇಟಾ ಬೇಸ್ ಸಿದ್ಧಪಡಿಸಿ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಅ.29: ಕೋವಿಡ್-19ಕ್ಕೆ ಲಸಿಕೆ ತಯಾರಿಕೆಯು ಅಂತಿಮ ಹಂತದಲ್ಲಿದ್ದು, ಕೇಂದ್ರ ಸರಕಾರದ ನಿರ್ದೇಶನದಂತೆ ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿಗಳಿಗೆ ನೀಡಬೇಕಿದೆ. ಇದಕ್ಕಾಗಿ ಜಿಲ್ಲೆಯಲ್ಲಿರುವ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿ ಗಳ ಮಾಹಿತಿಯ ಡೇಟಾಬೇಸ್ನ್ನು ಶೀಘ್ರದಲ್ಲಿ ಸಿದ್ಧಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.
ಗುರುವಾರ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೋವಿಡ್ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಕೋವಿಡ್-19 ಲಸಿಕೆ ನೀಡಲು ಜಿಲ್ಲೆಯಲ್ಲಿ ಕೆಪಿಎಂಇ ಕಾಯ್ದೆಯಡಿ ನೊಂದಣಿಯಾಗಿ ವೈದ್ಯಕೀಯ ಸೇವೆ ಒದಗಿಸುತ್ತಿರುವ 982 ಖಾಸಗಿ ಸಂಸ್ಥೆಗಳು ಹಾಗೂ 92 ಸರಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಶುಶ್ರೂಷಕರು, ಲ್ಯಾಬ್ ಟೆಕ್ನೀಯನ್ಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರ ವಿವರಗಳನ್ನು ಸಮಗ್ರವಾಗಿ ದಾಖಲಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ನಂತರದ ಹಂತದಲ್ಲಿ ವೃದ್ಧರು ಮತ್ತು ದುರ್ಬಲ ವ್ಯಕ್ತಿಗಳಿಗೆ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಮಕ್ಕಳಿಗೆ ನೀಡುವ ನಿಗದಿತ ಲಸಿಕೆಗಳನ್ನು ಯಾವುದೇ ಕಾರಣಕ್ಕೂ ತಪ್ಪಿಸದಂತೆ ಸೂಚಿಸಿದ ಜಿಲ್ಲಾಧಿಕಾರಿ, ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಲಸಿಕೆ ನೀಡಿ. ಲಾಕ್ಡೌನ್ ಸಮಯದಲ್ಲಿ ಕುಂಠಿತಗೊಂಡಿರುವ ಗುರಿಯನ್ನು ಪೂರ್ಣಗೊಳಿಸುವಂತೆ ಅವರು ಎಲ್ಲರಿಗೂ ಸೂಚಿಸಿದರು.
ಹೆರಿಗೆ ವೇಳೆ ತಾಯಿ ಮರಣವನ್ನು ತಪ್ಪಿಸಲು ಎಲ್ಲಾ ರೀತಿಯ ಗರಿಷ್ಠ ಪ್ರಯತ್ನ ನಡೆಸಿ. ಗರ್ಭಿಣಿಯರಿಗೆ ಹೆರಿಗೆ ವೇಳೆ ಸಮಸ್ಯೆ ಕಂಡು ಬರುವ ಸಾಧ್ಯತೆಯಿದ್ದಲ್ಲಿ ಅವರ ಚಿಕಿತ್ಸೆಗೆ ಮುಂಚಿತವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣ ಕಡಿಮೆಯಾಗುತ್ತಿದ್ದು, ಸಾವುಗಳು ಸಹ ಕಡಿಮೆಯಾಗಿವೆ. ಸಾರ್ವಜನಿಕರು, ಕೋವಿಡ್ ವೈರಸ್ ಸಂಪೂರ್ಣ ಇಲ್ಲವಾ ಗುವವರೆಗೆ ಸುರಕ್ಷತಾ ಅಂತರ ಪಾಲನೆ ಮತ್ತು ಮಾಸ್ಕ್ ಧರಿಸುವುದನ್ನು ನಿತ್ಯದ ರೂಢಿಯನ್ನಾಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಸಭೆಯಲ್ಲಿ ಉಡುಪಿ ಜಿಪಂ ಸಿಇಓ ಡಾ. ನವೀನ್ ಭಟ್ ವೈ., ಡಿಹೆಚ್ಓ ಡಾ.ಸುಧೀರ್ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಎಂ.ಜಿ.ರಾಮ ಸ್ವಾಗತಿಸಿ, ವಂದಿಸಿದರು.