ಉಡುಪಿಯ ಸರ್ವಧರ್ಮ ಮಂದಿರಗಳಿಗೆ ಡಿಕೆ ಶಿವಕುಮಾರ್ ಭೇಟಿ
ಉಡುಪಿ, ನ. 29: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಹಿನ್ನೆಲೆಯಲ್ಲಿ ನಗರದ ಸರ್ವ ಧರ್ಮ ಮಂದಿರಗಳಿಗೆ ಭೇಟಿ ನೀಡಿದರು.
ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ದೇವರ ದರ್ಶನ ಪಡೆದು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಸ್ವಾಮೀಜಿಯಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ವ್ಯವಸ್ಥಾಪಕ ಗೋವಿಂದ ರಾಜ್, ಪಿ.ಆರ್.ಓ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಜಾಮೀಯ ಮಸೀದಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅವರನ್ನು ಮಸೀದಿಯ ಮೌಲಾನ ರಶೀದ್ ಅಹ್ಮದ್ ನದ್ವಿ ಉಮರಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಡುಗಡೆಯಾಗದ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ, ಲವ್ ಜಿಹಾದ್ ಕಾನೂನಿನ ಮೂಲಕ ವ್ಯಕ್ತಿ ಸ್ವಾತಂತ್ರ ಧಮನ, ಗ್ರಾಪಂ ಚುನಾವಣೆಯಲ್ಲಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಪ್ರಾತಿನಿಧ್ಯತೆ ಸೇರಿದಂತೆ ವಿವಿಧ ವಿಚಾಯರಗಳ ಕುರಿತ ಮನವಿಯನ್ನು ಡಿಕೆ ಶಿವಕುಮಾರ್ ಅವರಿಗೆ ಸಲ್ಲಿಸಲಾಯಿತು.
ಮಸೀದಿ ಅಧ್ಯಕ್ಷ ಹರ್ಷದ್ ಅಹ್ಮದ್, ಕಾರ್ಯ ದರ್ಶಿ ವಿ.ಎಸ್.ಉಮರ್, ಕಾಂಗ್ರೆಸ್ ಮುಖಂಡ ಎಂ.ಎ.ಗಫೂರ್ ಮೊದ ಲಾದವರು ಉಪಸ್ಥಿತರಿದ್ದರು.
ಉಡುಪಿ ಬಿಷಪ್ ಹೌಸ್ಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅವರನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ವೊದಲಾದವರು ಉಪಸ್ಥಿತರಿದ್ದರು