ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ: ಅಡ್ಯಾಲು-ಕುಳ ಪ್ರದೇಶದಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ಪುತ್ತೂರು : ಸುಮಾರು 10ಕ್ಕೂ ಅಧಿಕ ಮನೆಗಳಿರುವ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಗೊಳಪಟ್ಟ ಅಡ್ಯಾಲು ಎಂಬಲ್ಲಿ ಸುಮಾರು 10 ಮನೆಗಳಿದ್ದು, ಇಲ್ಲಿನ ಕುಟುಂಬಸ್ಥರು ಕಳೆದ 50 ವರ್ಷಗಳಿಂದ ನಡೆದಾಡಲೂ ಸರಿಯಾದ ದಾರಿಯಿಲ್ಲದೆ ಪರದಾಡುತ್ತಿದ್ದಾರೆ. ನಮಗೆ ರಸ್ತೆ ಮಾಡಿ ಕೊಡಿ ಎಂದು ಪ್ರಧಾನಿ, ಮುಖ್ಯಮಂತ್ರಿ, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಸಾಕಷ್ಟು ಮನವಿ ಸಲ್ಲಿಸಿದ್ದರೂ ಈ ತನಕ ಯಾವುದೇ ಪರಿಹಾರ ದೊರಕಿಲ್ಲ. ಇದೀಗ ಇಲ್ಲಿನ ಕುಟುಂಬಸ್ಥರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೋಟಾ ಮತದಾನದ ಮೂಲಕ ಅಭ್ಯರ್ಥಿಗಳ ಪರ ಮತದಾನವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಅಡ್ಯಾಲುವಿನಲ್ಲಿ ಸುಮಾರು 10 ಮನೆಗಳಿದ್ದು, ಈ ಮನೆಗೆ ಸರಿಯಾದ ರಸ್ತೆ ವ್ಯವಸ್ಥೆಗಳಿಲ್ಲ. ಮಳೆಗಾಲದಲ್ಲಂತೂ ಇವರ ಸಂಕಷ್ಟ ಹೇಳತೀರ ದಂತಿದೆ. ಪುತ್ತೂರು ಕಬಕ ರಸ್ತೆಯ ಕವಲು ದಾರಿಯಾದ ಅಡ್ಯಾಲು-ಕುಳ ರಸ್ತೆಯು ಸುಮಾರು 1ಕೀ.ಮೀ ಉದ್ದವಿದ್ದು ಈ ರಸ್ತೆಯಲ್ಲಿ ಕೊನೆಯ 200 ಮೀ.ನಷ್ಟು ವ್ಯಾಪ್ತಿಯಲ್ಲಿ ರಸ್ತೆಯಿಲ್ಲದೆ ಕಾಲು ದಾರಿಯಾಗಿ ಮಾರ್ಪಟ್ಟಿದೆ. ಇಲ್ಲಿ ಸರಿಯಾದ ವಾಹನ ಸಂಚಾರ ಯೋಗ್ಯವಾದ ರಸ್ತೆ ನಿರ್ಮಾಣ ಮಾಡುವಂತೆ ಕಳೆದ 50 ವರ್ಷಗಳಿಂದಲೂ ಬೇಡಿಕೆ ಸಲ್ಲಿಸುತ್ತಲೇ ಬಂದಿದ್ದೇವೆ. ಆದರೆ ಪರಿಣಾಮ ಮಾತ್ರ ಶೂನ್ಯವಾಗಿದೆ ಎಂಬುದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.
ಪ್ರಧಾನಮಂತ್ರಿ, ಮುಖ್ಯಮಂತ್ರಿಗೂ ಮನವಿ
ನಮಗೆ ರಸ್ತೆ ವ್ಯವಸ್ಥೆ ಕಲ್ಪಿಸಿ ಎಂದು ಇಲ್ಲಿನ ಜನರು ಪ್ರಧಾನಮಂತ್ರಿ, ಮುಖ್ಯಮಂತ್ರಿಗೂ ಮನವಿ ಮಾಡಿದ್ದಾರೆ. ಈ ಮನವಿಗೆ ಸ್ಪಂಧಿಸಿದ ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿ ರಸ್ತೆ ನಿರ್ಮಿಸಿಕೊಡುವಂತೆ ಗ್ರಾಮ ಪಂಚಾಯತ್ಗೆ ಸೂಚನೆ ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಈ ಹಿಂದಿನ ಶಾಸಕರು ಹಾಗೂ ಈಗಿನ ಶಾಸಕರಿಗೂ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ, ತಹಶೀಲ್ದಾರ್ ಅವರಿಗೆ ನೀಡಿದ ಮನವಿಗೆ ಯಾವುದೇ ಸ್ಪಂಧನೆ ಸಿಕ್ಕಿಲ್ಲ, ಇಡ್ಕಿದು ಪಂಚಾಯತ್ಗೆ ನೀಡಿದ ಮನವಿಗಂತೂ ಲೆಕ್ಕವೇ ಇಲ್ಲ ಎನ್ನುತ್ತಾರೆ ಸ್ಥಳೀಯರು.
ಅಡ್ಯಾಲು-ಕುಳದಲ್ಲಿ ಎಂಡೋಸಲ್ಫಾನ್ ಪೀಡಿತರು, ವಿಕಲಚೇತನರು, ಬುದ್ಧಿಮಾಂಧ್ಯರು, ವೃದ್ಧರು, ಶಾಲಾ ಮಕ್ಕಳು ಹೀಗೆ ಎಲ್ಲಾ ತರದ ಜನರಿದ್ದೂ, ಮಕ್ಕಳಿಗೆ ಶಾಲೆಗೆ ಹೋಗಲು, ಅನಾರೋಗ್ಯ ಆದಾಗ ಆಸ್ಪತ್ರೆಗೆ ಹೋಗಲು ಪರದಾಡಬೇಕಾಗಿದೆ. ಮನೆ, ಇನ್ನಿತರ ಕಟ್ಟಡ ನಿರ್ಮಾಣಕ್ಕಂತೂ ಸಾಧ್ಯವೇ ಇಲ್ಲ. ನಿರ್ಮಾಣದ ಅಗತ್ಯ ಸಾಮಾಗ್ರಿಗಳನ್ನು ಸಾಗಿಸಲು ಆಗದ ಪರಿಸ್ಥಿತಿ ಇದೆ. ಇಲ್ಲಿನ 2 ಮನೆಗಳು ತೀರಾ ನಾದುರಸ್ತಿಯಲ್ಲಿದ್ದು ಬೀಳು ಸ್ಥಿತಿಯಲ್ಲಿದೆ. ಒಂದು ಮನೆಯವರು ಕಾಯಕಷ್ಟದಲ್ಲಿ ಮನೆ ನಿರ್ಮಿಸಲು ಮುಂದಾಗಿದ್ದರೂ ಕಳೆದ 3 ವರ್ಷಗಳಿಂದ ಕಾಮಗಾರಿ ಅರ್ಧಕ್ಕೆ ಬಾಕಿಯಾಗಿದೆ. ಅದನ್ನು ಪೂರ್ಣಗೊಳಿಸಬೇಕು ಇಲ್ಲದಿದ್ದಲ್ಲಿ ನಾವು ನೋಟಾ ಮತಚಲಾವಣೆ ನಡೆಸಿ ಅಭ್ಯರ್ಥಿ ಪರ ಮತ ಚಲಾವಣೆಯನ್ನು ಬಹಿಷ್ಕರಿಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.