ಜ. 24ಕ್ಕೆ ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಉಡುಪಿ, ಜ.20: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ತಾಲೂಕು ಘಟಕದ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಜ.24ರ ರವಿವಾರ ಸಾಬ್ರಕಟ್ಟೆಯ ಮಹಾತ್ಮಗಾಂಧಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ.
ಸಮ್ಮೇಳನಾಧ್ಯಕ್ಷರಾಗಿ ಬಾರಕೂರಿನ ಸಾಹಿತಿ, ಸಂಶೋಧಕ ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ.ಸಮ್ಮೇಳನವನ್ನು ಸಾಂಸ್ಕೃತಿಕ ಚಿಂತಕ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ ಉದ್ಘಾಟಿಸಲಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಕೆದ್ಲಾಯ ಉಪಸ್ಥಿತರಿರುವರು.
ಬಳಿಕ ಕವಿಗೋಷ್ಠಿ, ವಿಚಾರಗೋಷ್ಠಿ, ಕನ್ನಡ ಗೀತಗಾಯನ, ಹರಟೆ, ನುಡಿಚೇತನ, ಬಹುವಿಧ ಗೋಷ್ಠಿಗಳು ನಡೆಯಲಿವೆ. ಸಂಜೆ 4:15ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಸೂರಾಲಿನ ಸಾಹಿತಿಗಳಾದ ದೇವಿಪ್ರಸಾದ್ ತಂತ್ರಿಗಳು ಸಮಾರೋಪ ಭಾಷಣ ಮಾಡಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು ಎಂದು ಬ್ರಹ್ಮಾವರ ತಾಲೂಕು ಕಸಾಪ ಅಧ್ಯಕ್ಷ ಸೂರಾಲು ನಾರಾಯಣ ಮಡಿ ತಿಳಿಸಿದ್ದಾರೆ.
Next Story