ವಾರ್ಷಿಕ ಸಂಚಿಕೆ ‘ಸಂಧ್ಯಾ ರಶ್ಮಿ’ ಅನಾವರಣ
ಉಡುಪಿ, ಜ.22: ಉಡುಪಿ ಶ್ರೀಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಾರ್ಷಿಕ ಸಂಚಿಕೆ ಸಂಧ್ಯಾ ರಶ್ಮಿಯನ್ನು ಅದಮಾರು ಮಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಇತ್ತೀಚೆಗೆ ಅನಾವರಣಗೊಳಿಸಿದರು.
ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಅರುಣ ಕುಮಾರ್ ಎಸ್.ಆರ್. ಆಶಯ ಭಾಷಣ ಮಾಡಿ, ಶಿಕ್ಷಣ ಸಂಸ್ಥೆಗಳು ಕೇವಲ ನಿಗದಿತ ಪಠ್ಯವನ್ನು ಬೋಧಿಸುವುದಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ, ವ್ಯಕ್ತಿತ್ವ ರೂಪಣೆಗೆ ಪೂರಕವಾಗಿ, ಜೀವನವನ್ನು ಮುನ್ನಡೆಸುವ ಸಾಮರ್ಥ್ಯದ ಮಾರ್ಗದರ್ಶಿ ಸೂತ್ರವನ್ನು ಕಲಿಸುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕಾಲೇಜಿನ ಪ್ರಾಚಾರ್ಯ ಡಾ. ಸುಕನ್ಯಾ ಮೇರಿ ಜೆ. ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯ ದರ್ಶಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು. ಸಂಚಿಕೆಯ ಕಾರ್ಯನಿರ್ವಾಹಕ ಸಂಪಾದಕ, ರಮಾನಂದ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಹ ಸಂಪಾದಕಿ ಶ್ರೀಲತಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಹ ಸಂಪಾದಕ ಡಾ.ರಾಮಕೃಷ್ಣ ಉಡುಪ ವಂದಿಸಿದರು.