ಧಾರ್ಮಿಕ ಕ್ಷೇತ್ರದಲ್ಲಿ ಅನುಚಿತ ವರ್ತನೆ ವಿರುದ್ಧ ಕಠಿಣ ಕ್ರಮ: ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎಚ್ಚರಿಕೆ
ಮಂಗಳೂರು, ಜ.23: ಧಾರ್ಮಿಕ ಕ್ಷೇತ್ರಗಳ ಕಾಣಿಕೆ ಹುಂಡಿಗಳಲ್ಲಿ ಇತ್ತೀಚೆಗೆ ಅನುಚಿತ ವಸ್ತುಗಳು ಮತ್ತು ಅಸಹ್ಯಕರ ಬರಹಗಳು ಪತ್ತೆಯಾಗುತ್ತಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಎಚ್ಚರಿಸಿದ್ದಾರೆ.
ಈಗಾಗಲೇ ಇಂತಹ ಘಟನೆಗಳಿಗೆ ಸಂಬಂಧಿಸಿ ನಗರದ ಐದು ಠಾಣೆಗಳಲ್ಲಿ ದೂರು ದಾಖಲಾಗಿವೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆಯೂ ಆರಂಭಗೊಂಡಿದೆ. ಶಾಂತಿ ಕದಡಲು ಯತ್ನಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಕೂಡ ತಮಗೆ ಮಾಹಿತಿ ದೊರೆತಲ್ಲಿ ಮತ್ತು ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಅಶಾಂತಿ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಅನಿವಾರ್ಯ. ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ 9480802300 ಸಂಖ್ಯೆಗೆ ವಾಟ್ಸ್ಆ್ಯಪ್ ಅಥವಾ ಕರೆ ಮೂಲಕ ಮಾಹಿತಿ ನೀಡಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.