ಉಚ್ಚಿಲ : ಹೆದ್ದಾರಿ ಬದಿಯ ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ
ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪೇಟೆಯಲ್ಲಿ ಗೂಡಂಗಡಿಗಳ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.
ಗುರುವಾರ ಬೆಳಗ್ಗೆ ಉಚ್ಚಿಲ ಪೇಟೆಯಲ್ಲಿ ಸರ್ವಿಸ್ ರಸ್ತೆ ರಚನೆಗಾಗಿ ಅನಧಿಕೃತ ಗೂಡಂಗಡಿ ಮತ್ತು ಕಟ್ಟಡಗಳ ತೆರವಿಗೆ ಜೆಸಿಬಿ ಸಹಿತವಾಗಿ ಹೆದ್ದಾರಿ ಗುತ್ತಿಗೆದಾರ ಕಂಪನಿಯು ಆಗಮಿಸಿದ್ದು, ಅಂಗಡಿಗಳ ಮಾಲಕರು ಕಾಮಗಾರಿಗೆ ತಡೆಯೊಡ್ಡುವ ಪ್ರಯತ್ನ ನಡೆಸಿದರು.
ಈ ಸಂದರ್ಭದಲ್ಲಿ ನವಯುಗ್ ಕಂಪೆನಿಯ ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ರೈ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಉಚ್ಚಿಲದಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಎರಡೂ ಬದಿಯಲ್ಲಿ 30 ಮೀಟರ್ ಅಗಲದವರೆಗೆ ಹೆದ್ದಾರಿ ಇಲಾಖೆಯು ಸ್ವಾಧೀನ ಪಡಿಸಿ ಕೊಂಡಿರುವ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ ಎಂದರು.
ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಪಡುಬಿದ್ರಿ ಎಸ್ಸೈ ದಿಲೀಪ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.