ಹಿನ್ನೀರಿನಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ ಅಭಿವೃದ್ಧಿ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ, ಫೆ.12: ಜಿಲ್ಲೆಯ ಸಮುದ್ರ ಹಾಗೂ ನದಿ ವ್ಯಾಪ್ತಿಯಲ್ಲಿರುವ ಹಿನ್ನೀರಿನ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ತೇಲುವ ರೆಸ್ಟೋರೆಂಟ್ಗಳನ್ನು ಅಭಿವೃದ್ಧಿ ಪಡಿಸಬಹುದಾಗಿದ್ದು, ಈ ಕುರಿತಂತೆ ಆಸಕ್ತ ಖಾಸಗಿ ಸಂಸ್ಥೆ/ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿ, ನಂತರ ಟೆಂಡರ್ ಕರೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಬೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಸಾಕಷ್ಟು ಅವಕಾಶ ಗಳಿದ್ದು, ಪಡುಬಿದ್ರೆಯ ನಂತರ ಕುಂದಾಪುರದ ಕೋಡಿ ಬೀಚ್ನ್ನು ಬ್ಲೂಪ್ಲಾಗ್ ಮಾನ್ಯತೆ ಪಡೆಯುವ ಕುರಿತಂತೆ ಅಭಿವೃದ್ಧಿ ಪಡಿಸಲು ಪ್ರಾಥಮಿಕ ಸರ್ವೆ ನಡೆಸಲಾಗಿದೆ. ಪಡುವರಿ ಬೀಚ್ನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಲಾಗುತ್ತಿದೆ. ಒತ್ತಿನೆಣೆಯಲ್ಲಿ ಟ್ರೀಪಾರ್ಕ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಸೌಲ್ಯಗಳುಳ್ಳ ಟೂರಿಸಂ ಹಬ್ ಮಾಡಲು ಮಾಸ್ಟರ್ ಪ್ಲಾನ್ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿರುವ ಎಲ್ಲಾ ಬೀಚ್ಗಳು ತಮ್ಮದೇ ಆದಾಯದಿಂದ, ಬೀಚ್ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ, ಆರ್ಥಿಕವಾಗಿ ಸಶಕ್ತ ಬೀಚ್ಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಪಡುಬಿದ್ರೆ ಬ್ಲೂ ಪ್ಲಾಗ್ ಬೀಚ್ನಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿರುವ ಕುರಿತಂತೆ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪಡುಬಿದ್ರೆ ಮುಖ್ಯ ಬೀಚ್ನಲ್ಲಿ ಸಹ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳುವಂತೆ ಹಾಗೂ ಬೀಚ್ನ ನಿರ್ವಹಣೆಯನ್ನು ಸ್ಥಳೀಯರಿಗೆ ನೀಡಲು ಹಾಗೂ ಕಾಪು ಬೀಚ್ನ ನಿರ್ವಹಣೆಯನ್ನು ಸ್ಥಳೀಯರಿಗೆ ನೀಡುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗೆ ಸೂಚಿಸಿದರು.
ತ್ರಾಸಿ ಮತ್ತು ಮರವಂತೆ ಕಡಲ ತೀರದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಗೂಡಂಗಡಿ ನಡೆಸುತ್ತಿರುವವರಿಗೆ ನಿರ್ಮಿಸಲಾಗಿರುವ ಅಂಗಡಿ ಮಳಿಗೆಗಳನ್ನು ಹಂಚಿಕೆ ಮಾಡಿ. ಕೋಸ್ಟಲ್ ಸರ್ಕ್ಯೂಟ್ ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ. ಬೀಚ್ನಲ್ಲಿ ಕಾಮಗಾರಿ ನಿರ್ವಹಿಸುವಾಗ ಸಿಆರ್ಝಡ್ ನಿಯಮಗಳು ಉಲ್ಲಂಘನೆಯಾಗದಂತೆ, ಪರಿಸರ ಸ್ನೇಹಿ ಸಾಮಗ್ರಿಗಳನ್ನು ಬಳಸಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಿ ಎಂದು ಡಿಸಿ ತಿಳಿಸಿದರು.
ಜಿಲ್ಲೆಯಲ್ಲಿ ಅನುಮತಿ ಪಡೆಯದೇ ಕಾರ್ಯ ನಿರ್ವಹಿಸುತ್ತಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳುವಂತೆ ಸೂಚಿಸಿ, ತಪ್ಪಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಿ, ಹೋಂಸ್ಟೇಗಳ ಮಾಲಕರಿಗೆ ಮತ್ತು ಹೊಸದಾಗಿ ಹೋಂಸ್ಟೇ ಮಾಡಲು ಇಚ್ಚಿಸುವವರಿಗೆ ಸೂಕ್ತ ಮಾಹಿತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಗಾರವನ್ನು ಏರ್ಪಡಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಜಿಲ್ಲೆಯಲ್ಲಿರುವ ಜಲಪಾತಗಳನ್ನು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಅವಕಾಶಗಳಿದ್ದು, ಈ ಕುರಿತು ಪ್ರವಾಸೋದ್ಯಮ ಇಲಾಖೆಯಿಂದ ಯೋಜನೆ ರೂಪಿಸಿ. ಜಲಪಾತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದರು.
ಪ್ರವಾಸಿ ಸ್ಥಳಗಳಲ್ಲಿ ಉತ್ತಮ ವ್ಯವಸ್ಥೆಗಳುಳ್ಳ ಶೌಚಾಲಯಗಳನ್ನು ನಿರ್ಮಿಸಿ. ಉತ್ತಮ ರಸ್ತೆಗಳನ್ನು ನಿರ್ಮಿಸುವುದರಿಂದ ಪ್ರವಾಸೋದ್ಯಮ ಬೆಳವಣಿಗೆ ಹೊಂದಲು ಸಾಧ್ಯವಾಗಲಿದ್ದು, ಈ ಬಗ್ಗೆ ಗಮನ ಹರಿಸಿ. ಹೌಸ್ಬೋಟ್ಗಳ ಮೂಲಕ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸಲು ಸಾಧ್ಯವಾಗಲಿದ್ದು, ಹೌಸ್ ಬೋಟ್ ಅಳವಡಿಸುವವರಿಗೆ ಗರಿಷ್ಠ ಪ್ರಮಾಣದ ಸಬ್ಸಿಡಿ ನೀಡುವ ಕುರಿತಂತೆ ಬಜೆಟ್ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.
ಸಭೆಯಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕ ಲಾಲಾಜಿ ಆರ್ ಮೆಂಡನ್, ಜಿ.ಪಂ. ಸದಸ್ಯ ಶಶಿಕಾಂತ ಪಡುಬಿದ್ರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಪ್ರವಾಸೋದ್ಯಮ ಸಂಘಟನೆಳ ಪ್ರತಿನಿಧಿಗಳು ಉಪಸ್ಥಿತರಿದ್ದರು.