ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಭೇಟಿ
ಮಂಗಳೂರು, ಫೆ.22: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೋಮವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಮುಖಂಡರ ಜೊತೆ ಮಾತುಕತೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು 2018ರ ವಿಧಾನಸಭೆ ಚುನಾವಣೆಯ ಸಂದರ್ಭ ಜಿಲ್ಲೆಯಲ್ಲಿ ಕಳೆದುಕೊಂಡ ಸ್ಥಾನಗಳನ್ನು ಮರುಪಡೆಯಬೇಕು. ಈ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ವೈಫಲ್ಯಗಳನ್ನು ಜನರಿಗೆ ತೋರಿಸಬೇಕು. ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಜವಾಬ್ದಾರಿಯನ್ನು ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕಾಧ್ಯಕ್ಷರು ವಹಿಸಬೇಕು. ಮುಂಬರುವ ತಾಪಂ-ಜಿಪಂ ಚುನಾವಣೆ ಗಮನದಲ್ಲಿಟ್ಟುಕೊಂಡು ನಾಯಕರು, ಕಾರ್ಯಕರ್ತರು ಶ್ರಮವಹಿಸಬೇಕು ಎಂದರು.
ಈ ವರ್ಷ ಕಾಂಗ್ರೆಸ್ಗೆ ಸಂಘರ್ಷದ ವರ್ಷ. ಹಾಗಾಗಿ ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡಬೇಕು. ಹೊಸ ಕೃಷಿ ಕಾನೂನುಗಳ ದೋಷಗಳು ಮತ್ತಿತರ ಸಮಸ್ಯೆಗಳು ಹಾಗೂ ಬೆಲೆ ಏರಿಕೆಯ ವಿರುದ್ಧ ಹೋರಾಟ ಮಾಡಬೇಕು ಎಂದರು.
ಸಭೆಯಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಬಿ.ಇಬ್ರಾಹೀಂ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ.ಶಹೀದ್, ಹೇಮನಾಥ್ ಶೆಟ್ಟಿ ಕಾವು, ವಿಶ್ವಾಸ್ ಕುಮಾರ್ ದಾಸ್, ಬ್ಲಾಕ್ ಅಧ್ಯಕ್ಷರಾದ ಡಾ.ರಾಜರಾಮ್, ಸುಧೀರ್ ಕುಮಾರ್ ಶೆಟ್ಟಿ, ಎನ್.ಎಸ್.ಕರೀಂ, ನಝೀರ್ ಮಠ, ಮುಹಿಯುದ್ದೀನ್, ಶುಭೋದಯ ಆಳ್ವ, ಜಿಲ್ಲಾ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಿತ್ಯಾನಂದ ಶೆಟ್ಟಿ, ಫಾರೂಕ್ ಬಯಾಬೆ ಮತ್ತಿತರರು ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ವಂದಿಸಿದರು.