ಓದುವ ಹವ್ಯಾಸದಿಂದ ವ್ಯಕ್ತಿತ್ವ ಪ್ರಜ್ವಲ: ನೀಲಾವರ ಸುರೇಂದ್ರ ಅಡಿಗ
ಉಡುಪಿ, ಫೆ.24: ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸುವ ಕೆಲಸ ಅಗತ್ಯವಾಗಿ ಮಾಡಬೇಕು. ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿ ಕೊಂಡರೆ ವ್ಯಕ್ತಿತ್ವ ಪ್ರಜ್ವಲ ಆಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಲಯನ್ಸ್ ಕ್ಲಬ್ ಹಾಗೂ ಜಿಲ್ಲಾ ಲೇಖಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ಉಡುಪಿ ತಾಲೂಕು ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿ ಗಳಿಗೆ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಬುಧವಾರ ಆಯೋಜಿಸಲಾದ ಕಥೆ- ಕವನ-ನಟನಾ ಕಾರ್ಯಾಗಾರದಲ್ಲಿ ಅವರು ಆಶಯ ಭಾಷಣ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಮಾತ ನಾಡಿ, ಕಥೆ ಕವನಗಳು ಹೃದಯವನ್ನು ಜಾಗೃತಗೊಳಿಸುತ್ತದೆ. ನಮ್ಮ ಜ್ಞಾನಾ ನುಭವು ಬರವಣಿಗೆ ರೂಪದಲ್ಲಿ ಹೊರಹೊಮ್ಮುತ್ತದೆ. ಬೇರೆಯವರ ವ್ಯಥೆ ನಮಗೆ ಕಥೆಯಾದರೆ, ಇನ್ನೊಬ್ಬರ ಪಾಡು ನಮ್ಮಲ್ಲಿ ಹಾಡಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಸಾಹಿತಿ ಡಾ.ಮಾಧವಿ ಭಂಡಾರಿ, ಹಿರಿಯ ಪತ್ರಕರ್ತ ಗಣೇಶ್ ಪ್ರಸಾದ್ ಪಾಂಡೇಲು, ರಂಗ ನಿರ್ದೇಶಕ ರವಿರಾಜ್ ಎಚ್.ಪಿ. ಭಾಗವಹಿಸಿದ್ದರು.
ಲಯನ್ಸ್ ಕ್ಲಬ್ ಕಟ್ಟಡ ಸಮಿತಿ ಕಾರ್ಯದರ್ಶಿ ಭಾಸ್ಕರ ಶೆಟ್ಟಿ, ಕಸಾಪ ತಾಲೂಕು ಕಾರ್ಯದರ್ಶಿ ಮುರಳೀಧರ್ ಉಪಸ್ಥಿತರಿದ್ದರು. ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ನಿಕೇತನ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು.