ಕಂಬಳಕ್ಕೆ ಸಹಾಯಧನ: ಸಚಿವ ಯೋಗೇಶ್ವರ್ಗೆ ಸನ್ಮಾನ
ಮಂಗಳೂರು, ಮಾ.20: ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ 1 ಕೋ. ರೂ. ಅನುದಾನ ಬಿಡುಗಡೆ ಮಾಡಿರುವ ಪ್ರವಾಸೋದ್ಯಮ ಮತ್ತು ಪರಿಸರ, ಜೀವಶಾಸ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಜಿಲ್ಲಾ ಕಂಬಳ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ನಗರದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಜಾನಪದ ಕ್ರೀಡೆ ಕಂಬಳವನ್ನು ಉತ್ತೇಜಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಮಂಜೂರು ಮಾಡಲಾಗಿದ್ದು, ಸಚಿವ ಸಿ.ಪಿ.ಯೋಗೀಶ್ವರ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ತಲಾ 50ಲಕ್ಷ ರೂ. ನೀಡಲಾಗಿದ್ದು, 10 ಕಂಬಳಗಳಿಗೆ ತಲಾ 5 ಲಕ್ಷ ರೂ.ನಂತೆ ವಿತರಣೆಯಾಗ ಲಿದೆ. ಚೆಕ್ನ್ನು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಉಡುಪಿ ಜಿಲ್ಲಾಧಿಕಾರಿಗಳ ಪರವಾಗಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಸ್ವೀಕರಿಸಿದರು.
ಈ ಸಂದರ್ಭ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್. ಶೆಟ್ಟಿ, ತಿರುವೈಲುಗುತ್ತು ಕಂಬಳ ಸಮಿತಿ ಸ್ಥಾಪಕಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಕಂಬಳ ಸಮಿತಿ ಮಾಜಿ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ, ಲೋಕೇಶ್ ಶೆಟ್ಟಿ ಮುಚ್ಚೂರು ಕಲ್ಕುಡೆ, ಮೆಸ್ಕಾಂ ನಿರ್ದೇಶಕ ಕಿಶೋರ್ ಕುಮಾರ್ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.