ರಾ.ಹೆದ್ದಾರಿ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಲು ಆಗ್ರಹಿಸಿ ಎಸಿಗೆ ಮನವಿ
ಕುಂದಾಪುರ, ಎ.12: ಹಲವು ವರ್ಷಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಇನ್ನೂ ಕೂಡ ಅಪೂರ್ಣವಾಗಿಯೇ ಉಳಿದಿದೆ. ಈ ತನಕ ನೀಡಿದ ಗಡುವುಗಳೆಲ್ಲವೂ ಸುಳ್ಳಾಗಿದ್ದು, ಮೇ15ರೊಳಗೆ ಕಾಮಗಾರಿ ಮುಗಿಸದೇ ಇದ್ದರೆ ಮಳೆಗಾಲದಲ್ಲಿ ಕೃತಕ ನೆರೆ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ಜನಜೀವನಕ್ಕೂ ಹಾನಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಕುಂದಾಪುರ ಮತ್ತು ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯು ಇಂದು ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜುಗೆ ಮನವಿ ಸಲ್ಲಿಸಿದೆ.
ಗುತ್ತಿಗೆ ಕಂಪೆನಿಯ ಉದಾಸೀನತೆ, ಬೇಜವಾಬ್ದಾರಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ನಿರ್ಲಕ್ಷ್ಯ ಧೋರಣೆಯ ಕುರಿತು ಕಂಪೆನಿಯ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು. ಮುಂದಿನ 15 ದಿನಗಳ ಒಳಗೆ ಈ ಕಾಮಗಾರಿಯನ್ನು ಸಂಪೂರ್ಣಗೊಳಿಸಬೇಕು. ಅದು ಸಾಧ್ಯ ಇಲ್ಲದಿದ್ದರೆ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ರಸ್ತೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಬದಲಿ ವ್ಯವಸ್ಥೆ ಮಾಡಿಕೊಳ್ಳ ಬೇಕು ಎಂದು ಹೋರಾಟ ಸಮಿತಿ ತಿಳಿಸಿದೆ.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಬಿ.ಕಿಶೋರ್ ಕುಮಾರ್, ರಾಜೇಶ್ ಕಾವೇರಿ, ಶಶಿಧರ ಹೆಮ್ಮಾಡಿ, ವಿಕಾಸ್ ಹೆಗ್ಡೆ, ಶ್ಯಾಮ ಸುಂದರ ನಾಯರಿ, ಕೆಂಚನೂರು ಸೋಮಶೇಖರ ಶೆಟ್ಟಿ, ವಿವೇಕ್, ಗಣೇಶ ಮೆಂಡನ್, ಪ್ರತಾಪ ಶೆಟ್ಟಿ, ಪ್ರಶಾಂತ್ ಶೆಟ್ಟಿ, ನಾಗರಾಜ್ ಗಾಣಿಗ, ಭೋಜ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.