ಕಾಪು ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಿಗೆ ವಿನಯ್ ಕುಮಾರ್ ಸೊರಕೆ ಭೇಟಿ
ಕಾಪು : ಕಾಪು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಸೋಮವಾರ ಭೇಟಿ ನೀಡಿ ವೈದ್ಯಾಧಿಕಾರಿ ಗಳೊಂದಿಗೆ ಕೋವಿಡ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರ, ಕಾಪು, ಪಡುಬಿದ್ರಿ, ಮುದರಂಗಡಿ, ಮೂಡಬೆಟ್ಟು ಕಟಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೋವಿಡನಿಂದ ಬಳಲುತ್ತಿರುವವರಿಗೆ ನೀಡುವ ಚಿಕಿತ್ಸೆ ಮತ್ತು ಕಾಯಿಲೆ ಉದ್ಭವಿಸಿದಲ್ಲಿ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಹಾಗೂ ಸಾರ್ವಜನಿಕರಿಗೆ ನೀಡುವ ವ್ಯಾಕ್ಸಿನ್ ಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಲಹೆ ಸೂಚನೆಗಳನ್ನು ನೀಡಿದರು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳ ಸಮಸ್ಯೆಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರ ಬೇಡಿಕೆಯ ಬಗ್ಗೆ ಸ್ಥಳದಲ್ಲಿ ದೂರವಾಣಿ ಕರೆ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಸಂಪರ್ಕಿಸಿ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮನವಿ ಮಾಡಿದರು.
ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯಾಧಿಕಾರಿಗಳು ಹಾಗೂ ಕರೋನ ವಾರಿಯರರ್ಸ್ ಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು, ತೀವ್ರಗತಿಯಿಂದ ಹರಡುತ್ತಿರುವ ಕರೋನ ಕಾಯಿಲೆಯನ್ನ ಮಟ್ಟಹಾಕಲು ಸಾರ್ವಜನಿಕರು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದು ಅತೀ ಅಗತ್ಯ ವೆಂದು ತಿಳಿಸಿದರು.
ಕಾಪು ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್, ಪಡುಬಿದ್ರೆ ವೈದ್ಯಾಧಿಕಾರಿ ಡಾ.ರಾಜ್ಯಶ್ರೀ ಕಿಣಿ, ಮುದರಂಗಡಿ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ಪ್ರಭು, ಮೂಡಬೆಟ್ಟು ವೈದ್ಯಾಧಿಕಾರಿ ಡಾ.ಶೈನಿ ಯವರುಮಾಹಿತಿ ನೀಡಿದರು.
ಪುರಸಭೆಯ ಮಾಜಿ ಉಪಾಧ್ಯಕ ಉಸ್ಮಾನ್, ಪಡುಬಿದ್ರೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮ್ ರಾಯ್ ಪಾಟ್ಕರ್, ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರತನ್ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಸನಬ್ಬ ಶೇಕ್, ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಅಶೋಕ್ ನಾಯರಿ ಅವರು ಉಪಸ್ಥಿತರಿದ್ದರು.