ಕುಂದಾಪುರ: ಎಸ್ಸಿಡಿಸಿಸಿ ಬ್ಯಾಂಕ್ನಿಂದ ಆಹಾರದ ಕಿಟ್ ವಿತರಣೆ
ಕುಂದಾಪುರ, ಜೂ.18: ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗುಳಿದಿಲ್ಲ. ಸಮಾಜದ ಸಮಗ್ರ ಹಿತರಕ್ಷಣೆ ಮತ್ತು ಬೆಳವಣಿಗೆಗೆ ಬ್ಯಾಂಕ್ ಒತ್ತು ನೀಡುತ್ತದೆ. ಅಂತೆಯೇ ಸಮಾಜದ ಮುಖ್ಯ ಅಂಗವಾಗಿರುವ ಪತ್ರಕರ್ತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಬ್ಯಾಂಕ್ ಜಿಲ್ಲೆಯ ಎಲ್ಲಾ ಕಾರ್ಯನಿರತ ಪತ್ರಕರ್ತರಿಗೆ ಕೊರೋನಾ ಕಾಲದಲ್ಲಿ ಸಣ್ಣ ನೆರವು ಒದಗಿಸಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜು ಪೂಜಾರಿ ತಿಳಿಸಿದ್ದಾರೆ.
ಕುಂದಾಪುರದ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬ್ಯಾಂಕ್ ಕೊಡಮಾಡಿದ ಆಹಾರ ಕಿಟ್ಗಳನ್ನು ವಿತರಿಸಿ ಅವರು ಮಾತನಾಡುತಿದ್ದರು. ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಸಾಮಾಜಿಕ ಕಳಕಳಿಯ ಭಾಗವಾಗಿ ಈ ಕಾರ್ಯವನ್ನು ನಡೆಸಲಾಗುತ್ತಿದೆ ಎಂದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯಾ ಪಾಯಸ್ ಮಾತನಾಡಿ, ಅಪಾಯ ಲೆಕ್ಕಿಸದೆ ಸಮಾಜದ ಹಿತಕ್ಕಾಗಿ ಕಾರ್ಯಾ ಚರಿಸುವ ಪತ್ರಕರ್ತರ ಹಿತರಕ್ಷಣೆಗೆ ಬ್ಯಾಂಕ್ ಮುಂದಾಗಿರುವ ಬಗ್ಗೆ ಬ್ಯಾಂಕ್ನ ಅಧ್ಯಕ್ಷ ಮತ್ತು ನಿರ್ದೇಶಕ ಬಳಗಕ್ಕೆ ಕೃತಜ್ಞತೆ ಸಲ್ಲಿಸಿದರು.
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಮಾತನಾಡಿದರು. ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಂಘದ ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ ಉಪಸ್ಥಿತರಿದ್ದರು. ಅತಿಥಿಗಳನ್ನು ಸ್ವಾಗತಿಸಿದ ಎಸ್ಸಿಡಿಸಿಸಿ ಬ್ಯಾಂಕಿನ ಕುಂದಾಪುರ ಶಾಖೆಯ ಚಂದ್ರಶೇಖರ ಶೆಟ್ಟಿ, ಕಾರ್ಯಕ್ರಮ ನಿರೂಪಿಸಿದರು.