ಉಡುಪಿ ಜಿಲ್ಲೆಯಲ್ಲಿ ಲಾಕ್ಡೌನ್ ಯಥಾಸ್ಥಿತಿ ಮುಂದುವರಿಕೆ: ಡಿಸಿ ಜಗದೀಶ್
ಉಡುಪಿ, ಜೂ.19: ಜಿಲ್ಲೆಯ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆಯಾಗದ ಹಿನ್ನೆಲೆಯಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್ಡೌನ್ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಲಾಕ್ಡೌನ್ನಲ್ಲಿ ವಿನಾಯಿತಿ ನೀಡಿ ರಾಜ್ಯ ಸರಕಾರ ಶನಿವಾರ ಆದೇಶ ನೀಡಿದ್ದು, ಆದರೆ ಉಡುಪಿಯಲ್ಲಿ ಜೂ.11ರಂದು ಹೊರಡಿಸಿದ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು ಬೆಳಗ್ಗೆ 6 ರಿಂದ ಅಪರಾಹ್ನ 2 ರವರೆಗೆ ಮಾತ್ರ ತೆರೆದಿರಲಿದೆ ಎಂದವರು ತಿಳಿಸಿದರು.
‘ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಬರಬೇಕೆಂಬುದು ನಮ್ಮ ಗುರಿಯಾಗಿತ್ತು. ಆದರೆ ನಾವು ನಿರೀಕ್ಷಿಸಿರುವ ಪ್ರಮಾಣದಲ್ಲಿ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗಿಲ್ಲ. ಹೀಗಾಗಿ ಮುಂದೆ ನಾವು ಇನ್ನಷ್ಟು ಎಚ್ಚರಿಕೆ ತೆಗೆದು ಕೊಳ್ಳಬೇಕಾಗಿದೆ’ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸದ್ಯ ನಮ್ಮ ಜಿಲ್ಲೆಯಲ್ಲಿ ಜೂ.11ರ ಲಾಕ್ಡೌನ್ ಸಡಿಲಿಕೆ ಆದೇಶವೇ ಮುಂದುವರೆಯಲಿದೆ. ಬೆಳಗ್ಗೆ 6ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿಡಲು ಅವಕಾಶ ನೀಡಲಾಗುವುದು. ಉಳಿದೆಲ್ಲಾ ಮಾರ್ಗಸೂಚಿಗಳು ಹಿಂದಿನಂತೆ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.