ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ : ಶಾಸಕ ವೇದವ್ಯಾಸ ಕಾಮತ್
ಕಾರ್ಗಿಲ್ ವಿಜಯ ದಿವಸ್
ಮಂಗಳೂರು : ಕದ್ರಿ ಯೋಧರ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ ಅನುದಾನ ನೀಡುವುದಾಗಿ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಅವರು ಇಂದು ಕಾರ್ಗಿಲ್ ವಿಜಯ ದಿನದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆ ಗೈದು ಗೌರವ ಸಲ್ಲಿಸಿ ಮಾತನಾಡಿದರು.
ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನೂ ರಾಜಕೀಯ ರಹಿತವಾಗಿ ಗೌರವಿಸುವ ಕೆಲಸವಾಗಬೇಕು. ಮಾತೃಭೂಮಿಯ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಯೋಧರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಭಾರತ ಎಂದೆಂದಿಗೂ ಶಾಂತಿಯನ್ನು ಬಯಸುವ ರಾಷ್ಟ್ರ. ಆದರೆ ಅದನ್ನು ಅಸಹಾಯತೆ ಎಂದು ಭಾವಿಸಿದರೆ ಕಾರ್ಗಿಲ್ ಕದನ, ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ಮೇಲಿನ ದಾಳಿಯ ಮೂಲಕ ಸೇನಾ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಡುವಲ್ಲಿ ಭಾರತೀಯ ಸೇನೆ ಸಮರ್ಥ ವಾಗಿದೆ ಎಂದರು.
ಕದ್ರಿಯ ಯೋಧ ಸ್ಮಾರಕದ ಮೇಲ್ಛಾವಣಿ, ಬೆಳಕಿನ ವ್ಯವಸ್ಥೆ, ಸೌಂಡ್ ಸಿಸ್ಟಮ್, ಕಾರಂಜಿಗಳ ಅಭಿವೃದ್ಧಿ ಸೇರಿದಂತೆ ಯೋಧ ಸ್ಮಾರಕದ ಸಮಗ್ರ ಅಭಿವೃದ್ಧಿಗೆ ಅನುದಾನ ವಿನಿಯೋಗಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶಕಿಲಾ ಕಾವಾ, ಬಿಜೆಪಿ ಮುಖಂಡರಾದ ರೂಪಾ.ಡಿ ಬಂಗೇರ, ಪೂಜಾ ಪೈ, ಪ್ರಶಾಂತ್ ಪೈ, ಸೈನಿಕರ ಸಂಘದ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಬಾಳ, ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ, ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಕ್ರಮ್ ದತ್ತ, ಹಿರಿಯ ಅಧಿಕಾರಿಗಳಾದ ಬ್ರಿಗೇಡಿಯರ್ ಐ.ಎನ್ ರೈ, ಕರ್ನಲ್ ಎನ್.ಶರತ್ ಭಂಡಾರಿ, ಕರ್ನಲ್ ಜಯಚಂದ್ರನ್, ರೋಟರಿ ಪ್ರಮುಖರಾದ ಜೆ.ಪಿ ರೈ, ಲಯನ್ಸ್ ಪ್ರಮುಖರಾದ ವಿಜಯ ವಿಷ್ಣು ಮಯ್ಯ, ರೋಟರಿ ಸಂಸ್ಥೆಯ ಪ್ರಮುಖರು, ಲಯನ್ಸ್ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.