ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕು: ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ
ಮಂಗಳೂರು, ಜು.9: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಯಬೇಕು. ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕು ಮತ್ತು ಆರೋಪವಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರನ್ನು ತನಿಖೆಗೊಳಪಡಿಸಬೇಕು ಎಂದು ಜೆಡಿಎಸ್ ದ.ಕ ಜಿಲ್ಲಾ ಕಾರ್ಯಾಧ್ಯಕ್ಷ ಮುಹಮ್ಮದ್ ಕುಂಞಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಪೊಲೀಸರಿಗೆ ರಕ್ಷಣೆ ಇಲ್ಲದೆ ಇರುವಾಗ ರಾಜ್ಯದ ಜನರಿಗೆ ಪೊಲೀಸರು ರಕ್ಷಣೆ ಕೊಡಲು ಸಾಧ್ಯವಿಲ್ಲ. ರಾಜ್ಯ ಸರಕಾರವನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾ ಮುಖಂಡ ಎಸ್.ಪಿ. ಚೆಂಗಪ್ಪ, ರಾಜ್ಯದಲ್ಲಿ ಮರಳು ಮಾಫಿಯಾ, ರಿಯಲ್ ಎಸ್ಟೇಟ್ ಮಾಫಿಯಾ, ಲಿಕ್ಕರ್ ಮಾಫಿಯ ಕೆಲಸ ಮಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಡಿವೈಎಸ್ಪಿ ಗಣಪತಿ ಅವರಿಗೆ ಡಿಪ್ರೆಶನ್ ಇರುವುದಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ್, ಕೆ.ಜೆ. ಜಾರ್ಜ್ಗೆ ಡಿಪ್ರೆಶನ್ ಇದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಜೆಡಿಎಸ್ ಮುಖಂಡರಾದ ರಾಮ್ ಗಣೇಶ್, ವಸಂತ ಪೂಜಾರಿ, ರತ್ನಾಕರ್ ಸುವರ್ಣ, ಮುನೀರ್ ಮೊದಲಾದವರು ಉಪಸ್ಥಿತರಿದ್ದರು.