ಎಸ್ಸಿಡಿಸಿಸಿ ಬ್ಯಾಂಕ್ ಗ್ರಾಹಕರ ಸೇವೆಗೆ ಬದ್ಧ: ವಿನಯ ಕುಮಾರ್ ಸೂರಿಂಜೆ
ಮಂಗಳೂರು : ಎಸ್ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್. ಸಹಕಾರಿ ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿರುವ ಬ್ಯಾಂಕ್, ಗ್ರಾಹಕರ ಬೇಡಿಕೆಗೆ ಸದಾ ಸ್ಪಂದಿಸುತ್ತಿದೆ. ಬಿ.ಸಿ.ರೋಡ್ನಲ್ಲಿ ಎಟಿಎಂ ಕೇಂದ್ರವನ್ನು ತೆರೆಯುವ ಬಗ್ಗೆ ಗ್ರಾಹಕರ ಬೇಡಿಕೆ ಇತ್ತು. ಈ ಬೇಡಿಕೆ ಈಗ ಈಡೇರಿದೆ. ಎಸ್ಸಿಡಿಸಿಸಿ ಬ್ಯಾಂಕ್ ಗ್ರಾಹಕರ ಸೇವೆಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ ಹೇಳಿದರು.
ಅವರು ಸೋಮವಾರ ಬ್ಯಾಂಕಿನ ಬಿ.ಸಿ.ರೋಡ್ ಶಾಖೆಯ ನೆಲ ಅಂತಸ್ತಿನಲ್ಲಿ ಹೊಸ ಎಟಿಎಂ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಎಸ್ಸಿಡಿಸಿಸಿ ಬ್ಯಾಂಕ್ 107 ವರ್ಷಗಳ ಇತಿಹಾಸವನ್ನು ಹೊಂದಿದ್ದು, 105 ಶಾಖೆಗಳ ಮೂಲಕ ಹೊಸ ಹೊಸ ಬ್ಯಾಂಕಿಂಗ್ ಸೇವೆಯೊಂದಿಗೆ ಗ್ರಾಹಕರಿಗೆ ಎಸ್ಸಿಡಿಸಿಸಿ ಬ್ಯಾಂಕ್ ಹತ್ತಿರವಾಗಿದೆ. ಗ್ರಾಹಕರಿಗೆ ತ್ವರಿತ ಸೇವೆಯನ್ನು ಒದಗಿಸುವುದು ಬ್ಯಾಂಕಿನ ಮುಖ್ಯ ಧ್ಯೇಯವಾಗಿದೆ. ಬ್ಯಾಂಕ್ ಬಿ.ಸಿ.ರೋಡ್ ಸೇರಿದಂತೆ ನಾಲ್ಕು ಎಟಿಎಂ ಕೇಂದ್ರಗಳನ್ನು ಹೊಂದಿದೆ ಎಂದರು.
ಮುಖ್ಯ ಅತಿಥಿಯಾಗಿ ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷರಾದ ರವೀಂದ್ರ ಕಂಬಳಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ ಭಟ್, ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಎಕ್ಕಾರು ಮೋನಪ್ಪ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಕೌಶಲ್ ಪ್ರಸಾದ್ ಶೆಟ್ಟಿ, ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾದ ರಾಜಶೇಖರ್ ಜೈನ್ ಪುತ್ತೂರು, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಮಹಾಪ್ರಬಂಧಕರಾದ ಗೋಪಿನಾಥ್ ಭಟ್, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಗೋಪಾಲ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ದಿನೇಶ್ ಅಮೀನ್ ಕಾರ್ಯಕ್ರಮವನ್ನು ನಿರೂಪಿಸಿದರು.