ವೇಣೂರು: ಅನುಮಾನಾಸ್ಪದವಾಗಿ ವ್ಯಕ್ತಿ ಮೃತ್ಯು
ಬೆಳ್ತಂಗಡಿ, ಜು.12: ವೇಣೂರು ಠಾಣಾ ವ್ಯಾಪ್ತಿಯ ತುಂಬೆದ ಪಲ್ಕೆ ಎಂಬಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸ್ಥಳೀಯ ನಿವಾಸಿ ಕೃಷ್ಣಪ್ಪ ಪೂಜಾರಿ (40) ಎಂಬವರು ಅನುಮಾನಾಸ್ಪದವಾಗಿ ಮೃತಪಟ್ಟ ವ್ಯಕ್ತಿ.
ಕೃಷ್ಣಪ್ಪ ಪೂಜಾರಿಯವರು ಮನೆಯ ಸಮೀಪವೇ ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ನೋಡಿ ಸ್ಥಳೀಯರು ಮಾಹಿತಿ ನೀಡಿದ್ದು, ಪತ್ನಿ ಹಾಗೂ ಇತರರು ಹೋಗಿ ಕೂಡಲೆ ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಮೂಡುಬಿದಿರೆಯ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.
ಮೃತರ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಯಾವುದೇ ಅನಾರೋಗ್ಯದ ಸಮಸ್ಯೆಯಿಲ್ಲದ ಇವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವುದು ಹೇಗೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಈ ಬಗ್ಗೆ ಮಾಹಿತಿ ಲಭಿಸಬೇಕಾಗಿದೆ. ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.