ಸಚಿವ ಅಂಗಾರರಿಂದ ದ.ಕ.ಜಿಲ್ಲಾ, ತಾಲೂಕು ಆರೋಗ್ಯಾಧಿಕಾರಿಗಳಿಗೆ ವಾಹನ ಹಸ್ತಾಂತರ
ಮಂಗಳೂರು, ಅ.22: ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಎಂ. ಅವರಿಗೆ ಸ್ಕಾರ್ಪಿಯೋ ವಾಹನ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧು, ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಅವರಿಗೆ ಬೊಲೆರೋ ವಾಹನದ ಕೀ ಹಸ್ತಾಂತರಿಸಿದರು.
ನಂತರ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವುದು ಒಂದು ಸವಾಲಾಗಿದೆ. ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಈ ಮೂಲಕ ಆರೋಗ್ಯ ಇಲಾಖೆಗೆ ಶಕ್ತಿ ತುಂಬಲಾಗಿದೆ. ಅಧಿಕಾರಿಗಳು ಹೆಚ್ಚಿನ ಶ್ರದ್ಧೆಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ. ನಿರ್ಮಿತಿ ಕೇಂದ್ರದ ಉಳಿತಾಯದ ಹಣದಿಂದ ಮತ್ತೆ ಅದೇ ಇಲಾಖೆಗೆ ಕೊಡುಗೆಯಾಗಿ ನೀಡುವ ಕ್ರಮವು ಶ್ಲಾಘನೀಯ. ಇಂತಹ ವ್ಯವಸ್ಥೆ ರಾಜ್ಯದೆಲ್ಲೆಡೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಪಂ ಸಿಇಒ ಡಾ.ಕುಮಾರ್, ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.