ಪೊಲಿಪು, ಮಲ್ಪೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ
ಉಡುಪಿ, ನ.27: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪೊಲಿಪು ಕಾಪು ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಓದು ಶೀರ್ಷಿಕೆಯಡಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲೆ ಉಮಾ ಕೆ. ಅವರು ಉದ್ಘಾಟಿಸಿದರು.
ಉಡುಪಿ ಜಿಲ್ಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್. ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು. ಕಲಾವಿದರಾದ ಶಂಕರ್ದಾಸ್ ಚಂಡ್ಕಳ ಇವರಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೀತಗಾಯನ ನಡೆಸಿಕೊಟ್ಟರು. ಪೊಲಿಪು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರಮಣಿ, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ಸುಧಾಕರ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ನಾಗರಾಜ್ ಕಾರ್ಯಕ್ರಮ ನಿರೂಪಿಸಿ, ಶಂಕರ್ ದಾಸ್ ಚಂಡ್ಕಳ ವಂದಿಸಿದರು.
ಮಲ್ಪೆ: ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ಪಿ. ಉದ್ಘಾಟಿಸಿದರು. ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕ ವಿಶ್ವನಾಥ್ ಭಟ್, ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು.
ಕಲಾವಿದ ಶಂಕರ್ದಾಸ್ ಚಂಡ್ಕಳ ಇವರಿಂದ ಡಾ.ಬಿ.ಆರ್.ಅಂಬೇಡ್ಕರ್ ಗೀತಗಾಯನ ನಡೆಸಿಕೊಟ್ಟರು. ಮಲ್ಪೆ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಸಂಧ್ಯಾ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉಪಸ್ಥಿತರಿದ್ದರು. ಕುಮಾರ ಬೆಕ್ಕೇರಿ ಸ್ವಾಗತಿಸಿ, ಕಾಲೇಜಿನ ಉಪನ್ಯಾಸಕ ಎಸ್.ಜಿ.ಭಾಗವತ್ ಕಾರ್ಯಕ್ರಮ ನಿರೂಪಿಸಿದರು.