ಕೂಲಿ ಕಾರ್ಮಿಕರಿಗಾಗಿ ವಿಶೇಷ ಲಸಿಕಾ ಶಿಬಿರ: ಉಡುಪಿ ಡಿಸಿ ಕೂರ್ಮಾರಾವ್
ಉಡುಪಿ, ನ.30: ಕೂಲಿ ಕಾರ್ಮಿಕರು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಬೇಕಾಗಿ ರುವುದರಿಂದ ಅವರಿಗೆ ಲಸಿಕೆ ಪಡೆಯಲು ಸಮಯದ ಅನಾನುಕೂಲ ವಾಗಲಿದ್ದು, ಅವರಿಗಾಗಿ ಬಾನುವಾರ ಬೆಳಗ್ಗೆ 7ರಿಂದ 10ಗಂಟೆಯವರೆಗೆ ವಿಶೇಷ ಲಸಿಕಾ ಶಿಬಿರ ಏರ್ಪಡಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉಡುಪಿ ನಗರದ ವಿವಿಧ ಲಸಿಕಾ ಕೇಂದ್ರಗಳಿಗೆ ಮಂಗಳವಾರ ಭೇಟಿ ನೀಡಿ, ಅವರು ಪರಿಶೀಲನೆ ನಡೆಸಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹೈರಿಸ್ಕ್ ಪ್ರದೇಶವಾದ ಬೀಡಿನಗುಡ್ಡೆ ವಲಸೆ ಕಾರ್ಮಿಕರ ಮನೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಫಲಾನುಭವಿಗಳು ಲಸಿಕೆ ಪಡೆದ ಬಗ್ಗೆ ವಿಚಾರಣೆ ನಡೆಸಿದರು.
ಈ ಸಂದರ್ಭದಲ್ಲಿ ಅಲ್ಲಿನ ನಿವಾಸಿಗಳು ಹೆಚ್ಚಾಗಿ ಕೂಲಿ ಕಾರ್ಮಿಕರಾಗಿದ್ದು, ಬೆಳಗ್ಗೆ ಬೇಗ ಕೆಲಸಕ್ಕೆ ತೆರಳಬೇಕಾಗುತ್ತದೆ ಎಂದು ಅರಿತ ಜಿಲ್ಲಾಧಿಕಾರಿಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಹಾಗೂ ಕಾರ್ಮಿಕರು ಕೆಲಸಕ್ಕೆ ಒಟ್ಟು ಸೇರುವ ಸ್ಥಳದಲ್ಲಿ ವಿಶೇಷ ಶಿಬಿರಗಳನ್ನು ರವಿವಾರ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಆಯೋಜನೆ ಮಾಡಬೇಕು. ಲಸಿಕಾ ಮೇಳದ ದಿನದಲ್ಲಿ ವಲಸೆ ಕಾರ್ಮಿಕರಿಗಾಗಿ ವಿಶೇಷ ಲಸಿಕಾ ಶಿಬಿರಗಳನ್ನು ಆಯೋಜಿಸಿ, ಎಲ್ಲಾ ಕಾರ್ಮಿಕರೂ ಎರಡೂ ಡೋಸ್ ಲಸಿಕೆ ಪಡೆಯು ವಂತೆ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ನಗರಸಬೆಯಿಂ ಯೋಜನೆ ರೂಪಿಸಿಸಬೇಕು ಎಂದರು.
ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಏರ್ಪಡಿಸಲಾದ ಕೋವಿಡ್ ಲಸಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭ, ಈ ಲಸಿಕಾ ಕೇಂದ್ರದಲ್ಲಿ ಸುಮಾರು 25 ರಿಂದ 30 ಫಲಾನುವಿಗಳು ಲಸಿಕೆ ಪಡೆಯಲು ಆಗಮಿಸಿದ್ದರು. ಕೇವಲ ಒಬ್ಬ ಸಿಬ್ಬಂದಿಯಿಂದ ಮೊಬೈಲ್ನಲ್ಲಿ ಡಾಟಾ ಎಂಟ್ರಿ ನಡೆಸುವುದು ಕಷ್ಟವಾಗುತಿತಿರುವುದನ್ನು ಕಂಡ ಜಿಲ್ಲಾಧಿಕಾರಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಕೂಡಲೇ ಮತ್ತೊಬ್ಬರು ಸಿಬ್ಬಂದಿಯನ್ನು ಈ ಕೇಂದ್ರಕ್ಕೆ ಒದಗಿಸುವ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು. ನಂತರ ಲಸಿಕೆ ಪಡೆಯಲು ಬಂದ ಫಲಾನುಭವಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ದಲ್ಲಿ ಜಿಲ್ಲಾ ಕೋವಿಡ್ ಲಸಿಕಾ ನೋಡಲ್ ಅಧಿಕಾರಿ ಡಾ.ಎಂ.ಜಿ.ರಾಮ, ವಿಶ್ವ ಆರೋಗ್ಯ ಸಂಸ್ಥೆಯ ಲಸಿಕಾ ಉಸ್ತುವಾರಿ ಡಾ.ಅಶ್ವಿನ್ ಕುಮಾರ್, ನಗರಸಭೆ ಪೌರಾಯುಕ್ತ ಉದಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.