ವಿಧಾನ ಪರಿಷತ್ ಚುನಾವಣೆ; ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ
ಮಂಗಳೂರು, ಡಿ.7: ರಾಜ್ಯ ವಿಧಾನ ಪರಿಷತ್ತಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ದ್ವಿಸದಸ್ಯತ್ವ ಸ್ಥಾನಕ್ಕಾಗಿ ಡಿ.10 ರಂದು ಚುನಾವಣೆಯ ನಡೆಯಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆ, ಸಮಾರಂಭಗಳು, ಬೈಕ್ ರ್ಯಾಲಿ, ಬೀದಿ ನಾಟಕ ಮುಂತಾದ ಬಹಿರಂಗ ಚುನಾವಣಾ ಪ್ರಚಾರಗಳನ್ನು ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿಯೇ ನಿಲ್ಲಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.
ಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯವಾದ ಗಡುವಿನ ನಂತರ (ಡಿ.7ರ ಸಂಜೆ 4 ಗಂಟೆಯಿಂದ) ಚುನಾವಣಾ ಕ್ಷೇತ್ರದ ಮತದಾರರಲ್ಲದವರು, ರಾಜಕೀಯ ಕಾರ್ಯಕರ್ತರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಜಿಲ್ಲೆಯ ಮತದಾರರಲ್ಲದ ಹೊರಗಿನ ರಾಜಕೀಯ ಕಾರ್ಯಕರ್ತರು ಮತ್ತು ಮುಖಂಡರು ಬಹಿರಂಗ ಪ್ರಚಾರದ ಗಡುವು ಮುಕ್ತಾಯದ ನಂತರವೂ ಚುನಾವಣಾ ಕ್ಷೇತ್ರದಲ್ಲಿದ್ದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.