ಆಹಾರೋತ್ಪನ್ನಗಳ ಗುಣಮಟ್ಟವನ್ನು ಆಗಿಂದ್ದಾಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ, ಡಿ.24: ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಆಹಾರೋತ್ಪನ್ನಗಳು ಲಭ್ಯವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ೂರ್ಮಾರಾವ್ ಎಂ ಸೂಚನೆ ನೀಡಿದ್ದಾರೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಸಿದ್ಧ ಆಹಾರ ಉದ್ದಿಮೆಗಳನ್ನು ಪ್ರಾರಂಭಿಸುವ ಮುನ್ನ ಪ್ರತಿಯೊಬ್ಬರೂ ಸಕ್ಷಮ ಪ್ರಾಧಿಕಾರದಿಂದ ತಪ್ಪದೇ ಪರವಾನಗಿಯನ್ನು ಪಡೆದುಕೊಳ್ಳಬೇಕು. ಒಂದೊಮ್ಮೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಉಲ್ಲಂಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಕಲಬೆರಕೆ ಆಹಾರ ಮಾರಾಟ ಮಾಡುವ ಬಗ್ಗೆ ದೂರು ಗಳು ಕೇಳಿ ಬರುತ್ತಿವೆ. ಆಹಾರ ಸುರಕ್ಷಾ ಅಧಿಕಾರಿಗಳಿಗೆ ಈ ರೀತಿಯ ದೂರು ಗಳು ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡಿದಲ್ಲಿ ತಪ್ಪದೇ ಸಂಬಂದಪಟ್ಟ ವಹಿವಾಟು ಘಟಕಗಳಿಗೆ ಭೇಟಿ ನೀಡಿ, ಅವುಗಳ ಪರೀಕ್ಷೆಗಳನ್ನು ಕೈಗೊಂಡು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಜಿಲ್ಲೆಯ ಖಾಸಗಿ ಸೇರಿದಂತೆ ಮಾರಾಟವಾಗುವ ಎಲ್ಲಾ ಹಾಲುಗಳ, ಕುಡಿಯುವ ನೀರಿನ ಹಾಗೂ ಪ್ಯಾಕೇಜ್ಡ್ ಕುಡಿಯುವ ನೀರಿನ ಗುಣಮಟ್ಟವನ್ನು ಆಗಿಂದಾಗ್ಗೆ ಪರೀಕ್ಷಿಸಬೇಕು ಎಂದ ಅವರು, ದೇವಾಲಯದಲ್ಲಿ ಸಾರ್ವಜನಿಕರಿಗೆ ನೀಡುವ ಪ್ರಸಾದವನ್ನೂ ಸಹ ಪರೀಕ್ಷಿಸಬೇಕೆಂದು ಸಲಹೆ ನೀಡಿದರು.
ಸ್ಥಳಿಯ ಸಂಸ್ಥೆಗಳು ಹಾಗೂ ಗ್ರಾಪಂಗಳು ಪ್ರತೀವರ್ಷ ಪರವಾನಗಿ ನವೀಕರಣಗೊಳಿಸುವಾಗ ಆಹಾರ ಸುರಕ್ಷತೆ ಬಗ್ಗೆ ಪರವಾನಗಿ ಪಡೆದಿರುವವರ ಬಗ್ಗೆ ಗಮನಿಸುವುದು ಸೂಕ್ತ. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ ಹಾಗೂ ಶ್ವಾಸಕೋಶ ಸಂಬಂಧಿಸಿದ ಮಾರಕ ಕಾಯಿಲೆಗಳು ಉಂಟಾಗಿ, ಅಲ್ಪಾವಧಿಯಲ್ಲಿಯೇ ಇವು ಉಲ್ಬಣಗೊಂಡು ಮರಣ ಹೊಂದುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ತಂಬಾಕು ಉತ್ಪನ್ನ ಬಳಕೆಯಿಂದಾಗುವ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರೊಂದಿಗೆ ತಂಬಾಕು ಉತ್ಪನ್ನಗಳಿಂದ ದೂರವಿರುವಂತೆ ಜಾಗೃತಿ ಮೂಡಿಸಬೇಕು ಎಂದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಡಿಹೆಚ್ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಪ್ರೇಮಾನಂದ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಹಾಗೂ ಅರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.