ದಲಿತರ ಮೇಲಿನ ಹಲ್ಲೆ, ಮಾಯಾವತಿಗೆ ಅವಹೇಳನ ವಿರುದ್ಧ ಪ್ರತಿಭಟನೆ
ಮಂಗಳೂರು, ಜು. 23: ದಲಿತರ ಮೇಲಿನ ಹಲ್ಲೆ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ಬಿಜೆಪಿ ನಾಯಕರೊಬ್ಬರ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಕೋಮು ಸೌಹಾರ್ದ ವೇದಿಕೆ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಸತ್ತ ದನದ ಚರ್ಮ ಸುಲಿದರೆಂದು ಆರೋಪಿಸಿ ಗುಜರಾತ್ನ ದಲಿತರ ಮೇಲೆ ಹಾಗೂ ಚಿಕ್ಕಮಗಳೂರಿನಲ್ಲೂ ದಲಿತರ ಮೇಲೆ ಸಂಘಪರಿವಾರದ ಕಾರ್ಯಕರ್ತರು ನಡೆಸಿದ ಹಲ್ಲೆ ಮತ್ತು ಉತ್ತರ ಪ್ರದೇಶದ ಬಿಜೆಪಿ ಮುಖಂಡನಿಂದ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆಯ ವಿರುದ್ಧ ಕೋಸೌವೇಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು, ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಹಾಗೂ ಉತ್ತರ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್ನನ್ನು ಬಂಧಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್, ಸನ್ಮಾರ್ಗ ವಾರಪತ್ರಿಕೆಯ ಸಂಪಾದಕ ಎ.ಕೆ.ಕುಕ್ಕಿಲ, ದಲಿತ ಮುಖಂಡ ಹಾಗೂ ಉಪನ್ಯಾಸಕ ಡಾ.ವೇಸುದೇವ ಬೆಳ್ಳೆ, ಕೋಸೌವೇ ಜಿಲ್ಲಾ ಕಾರ್ಯದರ್ಶಿ ಇಸ್ಮತ್ ಫಜೀರ್, ಕೋಮು ಸೌಹಾರ್ದ ವೇದಿಕೆಯ ಉಮರ್ ಯು.ಎಚ್. ಜಮಾತೇ ಇಸ್ಲಾಮೀ ಹಿಂದ್ ಮಾಧ್ಯಮ ಕಾರ್ಯದರ್ಶಿ ಶಬೀರ್ ಅಹ್ಮದ್, ಉಪನ್ಯಾಸಕ ಭೂಮಿಗೌಡ, ಪ್ರವೀಣ್ ಶೆಟ್ಟಿ, ಗುಲಾಬಿ ಬಿಳಿಮಲೆ ಮೊದಲಾದವರು ಉಪಸ್ಥಿತರಿದ್ದರು.