ಭಟ್ಕಳದಲ್ಲಿ ಕಾಂಗ್ರೆಸ್ ವತಿನಿಂದ ಪ್ರತಿಭಟನೆ, ರಾಷ್ಟ್ರಪತಿಗೆ ಮನವಿ
ಭಟ್ಕಳ: ನ್ಯಾಶನಲ್ ಹೆರಾಲ್ಡ್ ಪಕ್ರಣಕ್ಕೆ ಸಂಬಂಧಿಸಿದಂತೆ ಖಾಸಗಿ ವ್ಯಕ್ತಿಯೊಬ್ಬರು ನೀಡಿದ ದೂರನ್ನು ಆಧರಿಸಿ ಕೇಂದ್ರ ಸರ್ಕಾರ ಪ್ರತಿಕಾರದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಮುಖಂಡರೂ ಸೇರಿದಂತೆ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಭಟ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಸೋಮವಾರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಭಟ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಿಂದ ಶಮ್ಸುದ್ದೀನ್ ವೃತ್ತದ ಮೂಲಕ ಸಹಾಯಕ ಆಯುಕ್ತರ ಕಚೇರಿಗೆ ಮೆರವಣೆಗೆ ನಡೆಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ದುರಾಡಳಿತದ ವಿರುದ್ಧ ಘೋಷಣೆ ಕೋಗಿ ಪ್ರತಿಭಟನೆ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ನಾಯ್ಕ, ಕೇಂದ್ರ ಸರ್ಕರ ದ್ವೇಷ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು ಮತ್ತು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ ಎಂದರು.
ಮಾಜಿ ಶಾಸಕ ಜೆ.ಡಿ.ನಾಯ್ಕ, ಕಾಂಗ್ರೆಸ್ ಮುಖಂಡ ರಾಮಾ ಮೊಗೇರ್ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು, ಮುಖಂಡರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.