ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ
ಮಂಗಳೂರು : ಯಕ್ಷಗಾನ ಕಲಾವಿದ, ಮಾಜಿ ಶಾಸಕ ಸುಂದರ್ ರಾವ್ (88) ಇಂದು ಮುಂಜಾನೆ ನಿಧನ ಹೊಂದಿದರು.
ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್ ಅವರು ಮಂಗಳೂರಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿ 1994 ರಿಂದ 1999ರವರೆಗೆ ಸೇವೆ ಸಲ್ಲಿಸಿದ್ದಾರೆ.
ಅವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಥಮ ಶಾಸಕರೆಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿಯ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದರು. ಅವರು ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದಾರೆ.
ಅವರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಅವಕಾಶವಿದೆ. ಯಕ್ಷಗಾನ ಕಲಾರಂಗದ ಇಡೀ ತಂಡ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದೆ.