ಯಲ್ಲಾಪುರ: ರಸ್ತೆ ಮಧ್ಯೆಯೇ ಸುಟ್ಟು ಕರಕಲಾದ ಸಿಮೆಂಟ್ ಸಾಗಾಟದ ಲಾರಿ
ಯಲ್ಲಾಪುರ, ಜ.17: ಚಲಿಸುತ್ತಿದ್ದ ಸಿಮೆಂಟ್ ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ತಾಲೂಕಿನ ಅರಬೈಲ್ನಲ್ಲಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು ಬೆಳಗ್ಗೆ 8:30ರ ಸುಮಾರಿಗೆ ನಡೆದಿದೆ.
ಬಾಗಲಕೋಟೆಯಿಂದ ಮಂಗಳೂರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಇದಾಗಿದ್ದು, ಅರಬೈಲ್ ಘಟ್ಟ ಇಳಿಯುತ್ತಿದ್ದಂತೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ವೇಳೆ ಲಾರಿ ಚಾಲಕ, ಸಹಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರು.
ಹೆದ್ದಾರಿಯ ಮಧ್ಯದಲ್ಲೇ ಲಾರಿ ಹೊತ್ತಿ ಉರಿದ ಕಾರಣ ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಬೆಂಕಿ ಅವಘಡದಿಂದ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story