ಸೆ.16ರಂದು ಕುದ್ರೋಳಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ
ಕುಡ್ಲ, ಸೆ.14: ಸರಕಾರಿ ಆದೇಶದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುವಂತೆ ದ.ಕ. ಜಿಲ್ಲೆಯಲ್ಲಿ ಸೆ.16ರಂದು ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ, ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹೇಳಿದರು.
ಕುದ್ರೋಳಿ ಕ್ಷೇತ್ರದ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಸಹಕಾರದೊಂದಿಗೆ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಸಹಯೋಗದಲ್ಲಿ ಸೆ.16ರಂದು ಬೆಳಗ್ಗೆ 10ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಕಾರ್ಯಕ್ರಮ ಕ್ಷೇತ್ರದ ಗೋಕರ್ಣನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದರು. ಬೆಳಗ್ಗೆ 9 ಗಂಟೆಗೆ ಕ್ಷೇತ್ರದಲ್ಲಿ ಗುರುಪೂಜೆ ನಡೆಯಲಿದೆ. ಅನಂತರ ನಗರದ ಲೇಡಿಹಿಲ್ ವೃತ್ತದಿಂದ ಗುರುಗಳ ಭಾವಚಿತ್ರದ ಮೆರವಣಿಗೆಯು ಭಜನೆ ಹಾಗೂ ವಾದ್ಯಗೋಷ್ಠಿಯೊಂದಿಗೆ ಸಂದೇಶಯಾತ್ರೆ ಹೊರಡಲಿದೆ. 10:30ಕ್ಕೆ ಸಭಾ ಕಾರ್ಯಕ್ರಮದ ಬಳಿಕ 11 ಗಂಟೆಗೆ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ವತಿಯಿಂದ ಅಂತರ್ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆಗಳು, ಸಂಜೆ 5:30ಕ್ಕೆ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಿಂದ ಶ್ರೀ ಕ್ಷೇತ್ರಕ್ಕೆ ಶ್ರೀ ನಾರಾಯಣ ಗುರುಗಳ ಭಾವಚಿತ್ರ ಮೆರವಣಿಗೆ ನಡೆಯಲಿದೆ ಎಂದು ಅವರು ಹೇಳಿದರು.