ಫೇಸ್ಬುಕ್ ಕಮೆಂಟ್ : ಬಿಜೆಪಿ ಕಾರ್ಯಕರ್ತನಿಗೆ ಹಲ್ಲೆ- ದೂರು
ಮೂಡುಬಿದಿರೆ, ಮೇ 23: ಫೇಸ್ಬುಕ್ನಲ್ಲಿ ಕಾಂಗ್ರೆಸ್ ವಿರೋಧಿಸಿ ಕಮೆಂಟ್ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತನೊಬ್ಬನಿಗೆ ನೂತನವಾಗಿ ಆಯ್ಕೆಯಾಗಿದ್ದ ಮೂಡುಬಿದಿರೆ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್ ಹಾಗೂ ತಂಡ ಮನೆಗೆ ನುಗ್ಗಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲಮುಂಡ್ಕೂರಿನ ಗ್ಲೆನ್ ವಿಶಾಲ್ ಡಿಸಿಲ್ವಾ ಎಂಬಾತ ಹಲ್ಲೆಗೊಳಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತ ಎಂದು ಗುರುತಿಸಲಾಗಿದೆ.
ಇಂದು ಕಾರಿನಲ್ಲಿ ಬಂದ ಆರೋಪಿಗಳಾದ ಚಂದ್ರಹಾಸ ಸನಿಲ್, ಸುಚಿನ್ ಸಾಲ್ಯಾನ್ ಮತ್ತು ಯಶು ಸನಿಲ್ ಎಂಬವರು ಗ್ಲೆನ್ ವಿಶಾಲ್ ಡಿಸಿಲ್ವಾ ಅವರ ಮನೆಯೊಳಗೆ ಪ್ರವೇಶಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಈ ಸಂದರ್ಭ ಗ್ಲೆನ್ ವಿಶಾಲ್ ಡಿಸಿಲ್ವಾರ ತಂದೆ ಮತ್ತು ಸಹೋದರಿ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಜೋಯ್ಲಸ್ ಡಿಸೋಜಾ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಂ., ಮೂಡುಬಿದಿರೆ ಮಂಡಲ ಅಧ್ಯಕ್ಷ ಈಶ್ವರ ಕಟೀಲ್ ಗಾಯಾಳುವನ್ನು ಭೇಟಿಯಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.