ಸಂತೆಕಟ್ಟೆ ರಾ.ಹೆದ್ದಾರಿ ಅಸಮರ್ಪಕ ಕಾಮಗಾರಿ : ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಾಗರಿಕರಿಂದ ಮನವಿ
ಉಡುಪಿ, ಸೆ.21: ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66ರ ಅಸಮರ್ಪಕ ಕಾಮಗಾರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸು ವಂತೆ ಆಗ್ರಹಿಸಿ ಸಂತೆಕಟ್ಟೆ ಗೋಪಾಲಪುರ ವಾರ್ಡ್ನ ನಾಗರಿಕರ ಹಿತರಕ್ಷಣಾ ವೇದಿಕೆ ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸಂತೆಕಟ್ಟೆ ಅತ್ಯಂತ ಜನನಿಬಿಡ ಹಾಗೂ ತ್ವರಿತಗತಿಯಲ್ಲಿ ಬೆಳೆಯುತ್ತಿರುವ ಪ್ರದೇಶವಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಶಾಲಾ ಕಾಲೇಜು, ಆರಾಧನ ಮಂದಿರಗಳು, ವಸತಿ ಸಮುಚ್ಛಯಗಳು, ಅಂಗಡಿ ಮುಂಗಟ್ಟುಗಳನ್ನು ಹೊಂದಿದೆ. ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯಿಂದ ಸಂತೆಕಟ್ಟೆ ಜಂಕ್ಷನ್ ಬಳಿ ಪ್ರತಿನಿತ್ಯ ನಾಗರಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅಲ್ಲದೆ ಪ್ರತಿನಿತ್ಯ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ನಿಯೋಗ ಮನವಿಯಲ್ಲಿ ದೂರಿದೆ.
ಇಲ್ಲಿ ನಿರ್ಮಿಸಿದ ಚರಂಡಿ ಹಾಗೂ ಪಾದಾಚಾರಿಗಳಿಗೆ ನಡೆದಾಡಲು ನಿರ್ಮಿಸಿದ ಕಾಲುದಾರಿ ಸಂಪೂರ್ಣ ಕಳಪೆಯಾಗಿದೆ. ಸಂತೆಕಟ್ಟೆ ಜಂಕ್ಷನ್ ಬಳಿ ಪ್ರತಿನಿತ್ಯ ನೂರಾರು ಬಸ್ಸುಗಳು ನಿಲುಗಡೆಯಾಗುತ್ತಿದ್ದು ಈವರೆಗೆ ಯಾವುದೇ ಬಸ್ ನಿಲ್ದಾಣವನ್ನು ಕೂಡ ನಿರ್ಮಿಸಿಲ್ಲ. ತಂಗುದಾಣವಿಲ್ಲದೆ ಜನರು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ನಿಂತು ಬಸ್ಸು ಕಾಯುವ ಅಪಾಯಕಾರಿ ಪರಿಸ್ಥಿತಿ ಉಂಟಾಗಿದೆ. ಇನ್ನಾದರೂ ಇಂತಹ ಗಂಭೀರ ಸಮಸ್ಯೆಗಳ ಕುರಿತು ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿಯನ್ನು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸ್ವೀಕರಿಸಿದರು. ನಿಯೋಗದಲ್ಲಿ ವೇದಿಕೆಯ ಅಧ್ಯಕ್ಷ ರಿಚ್ಚರ್ಡ್ ರೆಬೆಲ್ಲೊ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಸದಸ್ಯರಾದ ಜಿ.ವಿ.ನಾಯಕ್, ಶೇಖರ್ ನಾಯಕ್ ಹಾಗೂ ಕೆಥೊಲಿಕ್ ಸಭಾ ಉಡುಪಿ ಧರ್ಮಪ್ರಾಂತದ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.