ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ
ಬಾಗಲಕೋಟೆ, ಎ.24: ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಮುನ್ನ ನಗರದ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಶ್ರೀರಾಮುಲು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಜೊತೆ ಬಾದಾಮಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಬಾದಾಮಿ ಹಾಗೂ ಚಾಮುಂಡೇಶ್ವರಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲು ಖಚಿತ. ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಜಯಭೇರಿ ಬಾರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಚುನಾವಣಾ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಮಾತನಾಡಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಭಯದಿಂದ ಸಿದ್ದರಾಮಯ್ಯ ಬಾದಾಮಿಗೆ ಬಂದಿದ್ದಾರೆ. ಆದರೆ, ಇಲ್ಲಿಯೂ ಅವರಿಗೆ ಬನಶಂಕರಿ ದೇವಿಯ ಆಶೀರ್ವಾದ ಸಿಗುವುದಿಲ್ಲ. ಮುಖ್ಯಮಂತ್ರಿಯಾಗಿದ್ದವರು ಎರಡು ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸುವಂತಾಗಿದೆ ಎಂದು ವ್ಯಂಗ್ಯವಾಡಿದರು.