ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಾಯಿಯನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದ ಮಗ
ಚಿಕ್ಕಮಗಳೂರು, ಜ.17: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಹೊರಟ್ಟಿ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ. ಮೀನಾಕ್ಷಿ(65) ಹತ್ಯೆಯಾದ ವೃದ್ದೆಯಾಗಿದ್ದು, ಈತನ ಮಗ ಗಣೇಶ್(40) ತಾಯಿಯನ್ನೇ ಕೊಂದ ಆರೋಪಿ ಎಂದು ತಿಳಿದು ಬಂದಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದವನಾದ ಗಣೇಶ್ ವಿಪರೀತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದ್ದು, ಗುರುವಾರ ಎಂದಿನಂತೆ ಕುಡಿದು ಬಂದು ತನ್ನ ತಾಯಿ ಮೀನಾಕ್ಷಿಯೊಂದಿಗೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ನಡೆಸಿದ್ದಾನೆ. ಇದರಿಂದ ಕೋಪಗೊಂಡ ತಾಯಿ ಮೀನಾಕ್ಷಿ ಗಣೇಶನಿಗೆ ಬೈದಿದ್ದಾರೆ. ಇದರಿಂದ ಆಕ್ರೋಶಗೊಂಡ ಗಣೇಶ ಮನೆಯ ಸಮೀಪದಲ್ಲೇ ಇದ್ದ ದೊಣ್ಣೆಯೊಂದರಿಂದ ತಾಯಿಯ ತಲೆ ಸೇರಿದಂತೆ ದೇಹದ ಹಲವೆಡೆ ಮನಸೋ ಇಚ್ಛೆ ಥಳಿಸಿದ್ದಾನೆಂದು ತಿಳಿದು ಬಂದಿದೆ.
ಮಾರಣಾಂತಿಕ ಹಲ್ಲೆಯಿಂದ ಮೀನಾಕ್ಷಿ ಅವರ ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆಂದು ಹೇಳಲಾಗುತ್ತಿದ್ದು, ಘಟನೆ ನಡೆದ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಪರಿಣಾಮ ಕೆಲ ಗಂಟೆಗಳ ಬಳಿಕ ಹತ್ಯೆಯ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಣೇಶ್ನನ್ನು ವಿಚಾರಣೆಗೊಳಪಡಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿಸಲಾಗಿದೆ ಎಂದು ತಿಳಿದು ಬಂದಿದೆ.