ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್
ಬೆಂಗಳೂರು, ಮಾ.6: ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪ್ರತಿ ವರ್ಷ ಸಂಭವಿಸುವ ಅನಪೇಕ್ಷಿತ ಹಾಗೂ ಅನೈಸರ್ಗಿಕ ಕಾಡ್ಗಿಚ್ಚು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹಾಗೂ ಅರಣ್ಯ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಕಾಟಕೇರಿ ಗ್ರಾಮದ ನಿವಾಸಿ ಹಾಗೂ ಕಾವೇರಿ ಸೇನೆಯ ಪ್ರಧಾನ ಸಂಚಾಲಕ ಕೆ.ಎ. ರವಿ ಚೆಂಗಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆಲೋಕ್ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಮಾ.13ಕ್ಕೆ ಮುಂದೂಡಿತು. ಜಿಲ್ಲೆಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಕೋರಿ ಅರ್ಜಿದಾರರು 2017ರ ಮಾ.6ರಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪರಿಗಣಿಸಬೇಕು. ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶ, ವನ್ಯಜೀವಿಗಳನ್ನು ರಕ್ಷಿಸಲು ವಿಶೇಷ ಕಾರ್ಯಪಡೆ ರಚಿಸುವಂತೆ ರಾಜ್ಯ ಸರಕಾರ ಹಾಗೂ ಅರಣ್ಯ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಕಾಡ್ಗಿಚ್ಚು ಘಟನೆಗಳು ಹೆಚ್ಚಾಗುತ್ತಿವೆ. ಕಳೆದ ಹಲವು ವರ್ಷಗಳಿಂದ ಕೆಲವು ದುಷ್ಕರ್ಮಿಗಳು ಪ್ರತಿ ವರ್ಷ ಜನವರಿಯಿಂದ ಜೂನ್ ತಿಂಗಳ ನಡುವೆ ಕಾಡಿಗೆ ಬೆಂಕಿ ಹಾಕುತ್ತಾರೆ. ಇದರಿಂದ, ಹೆಕ್ಟೆರುಗಟ್ಟಲೆ ಅರಣ್ಯ ಭೂಮಿ ನಾಶವಾಗುತ್ತಿದೆ. ಈ ಕುರಿತು ಸಂಬಂಧಪಟ್ಟವರಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. 2017ರ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಸಂಭವಿಸಿದ ಕಾಡ್ಗಿಚ್ಚಿಗೆ ಕುಶಾಲನಗರ, ಶುಂಠಿಕೊಪ್ಪ ಸುತ್ತಲಿನ 150 ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿತ್ತು. ಹೀಗಾಗಿ, ಇದನ್ನು ತಡೆಗಟ್ಟಲು ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಕೊಡಗು ಜಿಲ್ಲೆಯಲ್ಲಿ ಕಾಡ್ಗಿಚ್ಚು ಘಟನೆಗಳನ್ನು ತಡೆಯಲು ಎಲ್ಲ ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾಡ್ಗಿಚ್ಚು ನಿಯಂತ್ರಣ ಹಾಗೂ ನಿರ್ವಹಣಾ ಯೋಜನೆ-2018-19 ಈಗಾಗಲೇ ರೂಪಿಸಲಾಗಿದೆ. ಪ್ರಸಕ್ತ ವರ್ಷ ಮಡಿಕೇರಿ ವಲಯವನ್ನು ಕಾಡ್ಗಿಚ್ಚು ಶೂನ್ಯ ಪ್ರದೇಶವನ್ನಾಗಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಫೆ.2ರಂದು ಸರಕಾರದ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿದ್ದಾರೆ.