"ಕೆರೆಗಳಿಗೆ ಚರಂಡಿ ನೀರು ಹರಿಯದಂತೆ ತಡೆಯಲು ಯಾವ ಕ್ರಮ ಕೈಗೊಂಡಿದ್ದೀರಿ"
ಬಿಬಿಎಂಪಿಗೆ ಹೈಕೋರ್ಟ್ ಪ್ರಶ್ನೆ
ಬೆಂಗಳೂರು, ಜೂ.6: ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಕೆರೆಗಳಿಗೆ ಹರಿಯಬಿಡುವ ಚರಂಡಿ ನೀರನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ಸಲ್ಲಿಸಿ ಎಂದು ಹೈಕೋರ್ಟ್ ಬಿಬಿಎಂಪಿಗೆ ಆದೇಶಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ಕೋರಿದ ಪಿಐಎಲ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಗರದ ಕೆರೆಗಳ ಬಗ್ಗೆ ಪ್ರಸ್ತಾಪಿಸಿದರು. ಇದನ್ನು ಆಲಿಸಿದ ನ್ಯಾಯಪೀಠವು, ಬಿಬಿಎಂಪಿ ಮತ್ತು ರಾಜ್ಯ ಸರಕಾರದ ವಕೀಲರನ್ನು ಉದ್ದೇಶಿಸಿ 184 ಕೆರೆಗಳಲ್ಲಿ ಎಷ್ಟು ಕೆರೆಗಳ ಪುನರುಜ್ಜೀವನ ಕಾರ್ಯ ಕೈಗೊಳ್ಳಲಾಗಿದೆ. ಇವುಗಳಿಗೆ ತ್ಯಾಜ್ಯ ನೀರನ್ನು ಏನಾದರೂ ಹರಿಯಬಿಡಲಾಗುತ್ತಿದೆಯೇ ಹೇಗೆ ಎಂದು ಶುಕ್ರವಾರ ತಿಳಿಸಬೇಕೆಂದು ನಿರ್ದೇಶಿಸಿದರು.
ನೀವು ತಿಳಿಸುವ ವಿವರ ಸತ್ಯಾಂಶಗಳಿಂದ ಕೂಡಿರಬೇಕು. ಒಂದು ವೇಳೆ ವಾಸ್ತವಕ್ಕೂ ವರದಿಗೂ ವ್ಯತ್ಯಾಸ ಕಂಡು ಬಂದರೆ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿ, ವಿಚಾರಣೆಯನ್ನು ಮುಂದೂಡಿತು.