ಸ್ಪೀಕರ್ ನಿರ್ಧಾರದ ನಂತರ ಬಿಜೆಪಿ ತೀರ್ಮಾನ: ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್
ಬೆಂಗಳೂರು, ಜು.7: ಕಾಂಗ್ರೆಸ್-ಜೆಡಿಎಸ್ ಪಕ್ಷದ ಅತೃಪ್ತ ಶಾಸಕರು ರಾಜಿನಾಮೆ ನೀಡಿರುವ ಸಂಬಂಧ ಸ್ಪೀಕರ್ ರಮೇಶ್ ಕುಮಾರ್ ಅವರು ಕೈಗೊಳ್ಳುವ ನಿರ್ಧಾರದ ನಂತರ, ಬಿಜೆಪಿ ತೀರ್ಮಾನ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರಕಾರ ಜನರ ವಿಶ್ವಾಸ ಕಳೆದುಕೊಂಡಿರುವುದು ಲೋಕಸಭಾ ಚುನಾವಣಾ ಫಲಿತಾಂಶದಲ್ಲಿಯೇ ಗೊತ್ತಾಯಿತು.ಸದ್ಯ ಅಸ್ತಿತ್ವದಲ್ಲಿರುವ ಸಮ್ಮಿಶ್ರ ಸರಕಾರ ಕೂಡ ಜನರ ಆಶಯಗಳಿಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಇದರಿಂದ ಶಾಸಕರಲ್ಲಿಯೂ ಅಸಮಾಧಾನ ಇದೆ ಎಂದು ಆರೋಪಿಸಿದರು.
ಈ ಸರಕಾರದಿಂದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ 14 ಜನ ಕಾಂಗ್ರೆಸ್-ಜೆಡಿಎಸ್ ಶಾಸಕರು ಸಭಾಧ್ಯಕ್ಷರಾದ ರಮೇಶ್ ಕುಮಾರ್ ಕಚೇರಿಯ ಕಾರ್ಯದರ್ಶಿಗೆ ರಾಜೀನಾಮೆ ಪ್ರತಿ ಸಲ್ಲಿಸಿದ್ದಾರೆ. ಈಗ ನಿರ್ಧಾರ ಸಭಾಧ್ಯಕ್ಷರ ಅಂಗಳದಲ್ಲಿದ್ದು, ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದು ನೋಡಿ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story