ಶ್ರೀರಾಮುಲುಗೆ ಸಚಿವ ಸ್ಥಾನ ನೀಡಿದರೆ ಸಂತೋಷ: ಶಾಸಕ ಸೋಮಶೇಖರ್ ರೆಡ್ಡಿ
ಬಳ್ಳಾರಿ, ಆ. 17: ದೇವರ ಮೇಲೆ ನನಗೆ ನಂಬಿಕೆ ಇದೆ. ನನಗೆ ಸಚಿವ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುವೆ. ಮೊಳಕಾಲ್ಮೂರು ಕ್ಷೇತ್ರದ ಶಾಸಕ ಶ್ರೀರಾಮುಲು ಅವರಿಗೆ ಸಚಿವ ಸ್ಥಾನ ನೀಡಿದರೂ ತುಂಬಾ ಸಂತೋಷ ಎಂದು ಶಾಸಕ ಸೋಮಶೇಖರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮಗೆ ಸಚಿವ ಸ್ಥಾನದ ಆಸೆಯಿಲ್ಲ. ಆದರೆ, ಸ್ಥಾನ ನೀಡಿದರೆ ನಿಭಾಯಿಸುತ್ತೇನೆ. ಶ್ರೀರಾಮುಲು ಅವರಿಗೆ ನೀಡಿದರೂ ಖುಷಿಯಾಗುತ್ತದೆ. ಯಾರಿಗೆ ಸಚಿವ ಸ್ಥಾನ ನೀಡಿದರೂ ಬಳ್ಳಾರಿ ಮತ್ತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು.
ಮಾಜಿ ಸಚಿವ ಕರುಣಾಕರ ರೆಡ್ಡಿ ಮತ್ತು ನಮ್ಮ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ, ಶ್ರೀರಾಮುಲು ಸೇರಿ ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ನಾವೆಲ್ಲರೂ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಎಂದರು.
ನಾವು ಎಂದೂ ಜಗಳ ಆಡಿಲ್ಲ, ಹೀಗಾಗಿ ನಾವು ಮತ್ತೆ ಒಂದಾಗಿದ್ದೇವೆ. ಬಿಎಸ್ಸಾರ್ ಕಾಂಗ್ರೆಸ್ ಪಕ್ಷ ಸ್ಥಾಪನೆ ವೇಳೆ ಕರುಣಾಕರ ರೆಡ್ಡಿ ನಮ್ಮಿಂದಿಗೆ ಬಂದಿರಲಿಲ್ಲ ಎಂದ ಅವರು, ಅದೊಂದು ವಿಚಾರ ಬಿಟ್ಟರೆ ನಾವು ಎಂದೂ ಜಗಳ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.