ತನ್ನ ವಿರುದ್ಧ ಹೇಳಿಕೆ ನೀಡಿದ್ದ ಶ್ರೀರಾಮುಲುಗೆ ಬೈಬಲ್ ಸಂದೇಶ ಉಲ್ಲೇಖಿಸಿ ತಿರುಗೇಟು ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಅ. 20: ಮಾಜಿ ಸಿಎಂ ಸಿದ್ದರಾಮಯ್ಯ ತನ್ನ ವಿರುದ್ಧ ಹೇಳಿಕೆ ನೀಡಿದ್ದ ಆರೋಗ್ಯ ಸಚಿವ ಶ್ರೀರಾಮುಲುಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಬೈಬಲ್ ನ ಸಂದೇಶವೊಂದನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.
ರವಿವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಬೈಬಲ್ ನ ಸಂದೇಶವೊಂದನ್ನು ಉಲ್ಲೇಖಿಸಿ, 'ತಂದೆಯೇ ಅವರನ್ನು ಕ್ಷಮಿಸು. ಅವರು ಏನು ಮಾಡುತ್ತಿದ್ದಾರೆಂದು ಅವರಿಗೇ ಗೊತ್ತಿಲ್ಲ’ ಎಂದು ಏಸುಕ್ರಿಸ್ತನ ವಾಕ್ಯವನ್ನು ಪ್ರಸ್ತಾಪಿಸಿ ಪ್ರತಿಕ್ರಿಯೆ ನೀಡಿದ್ದಾರೆ.
‘ಸಿದ್ದರಾಮಯ್ಯ ಭೂಮಿ ಮೇಲೆ ಇರಬಾರದು’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ತನ್ನ ಸಾವು ಬಯಸಿದವರಿಗೆ ಏಸುಕ್ರಿಸ್ತ ಹೇಳಿದ್ದನ್ನೇ ಶ್ರೀರಾಮುಲು ಅವರಿಗೆ ಹೇಳುವೆ, ‘ಅವರನ್ನು ಕ್ಷಮಿಸಿಬಿಡು ತಂದೆಯೇ, ಅವರೇನು ಮಾಡುತ್ತಿದ್ದಾರೆ ಎನ್ನುವುದು ಅವರಿಗೆ ತಿಳಿದಿಲ್ಲ’ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸಮೀಕ್ಷೆ ವರದಿ ತಿರಸ್ಕರಿಸಲು ಹುನ್ನಾರ: ‘ನಮ್ಮ ಸರಕಾರ ರಾಜ್ಯದಲ್ಲಿ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿರದಿದ್ದ ಕಾರಣದಿಂದಾಗಿ ಜಾರಿಗೊಳಿಸಲು ಆಗಿಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
‘ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈಗಿನ ಬಿಜೆಪಿ ಸರಕಾರಕ್ಕೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಬಿಜೆಪಿ ತಿರಸ್ಕರಿಸಲು ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಆರೋಪಿಸಿದ್ದಾರೆ.
‘ಸಮೀಕ್ಷೆ ಯಾವುದೋ ಒಂದು ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ, ರಾಜ್ಯದ ಪ್ರತಿ ಕುಟುಂಬವನ್ನು ಸಂಪರ್ಕಿಸಿ ತಲೆ ಎಣಿಕೆ ಮೂಲಕ ವೈಜ್ಞಾನಿಕವಾಗಿ ನಡೆಸಿದ್ದ ಸಮೀಕ್ಷೆ. ಈ ವರದಿಯನ್ನು ಒಪ್ಪಿಕೊಂಡರೆ ಸರ್ವ ಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಾಗುತ್ತದೆ. ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ವಿರೋಧಿಯಾಗಿರುವ ಬಿಜೆಪಿಗೆ ಇದು ಇಷ್ಟ ಆಗುತ್ತಿಲ್ಲ’
-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
'ಸಿದ್ದರಾಮಯ್ಯ ಭೂಮಿ ಮೇಲೆ ಇರಬಾರದು' ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
— Siddaramaiah (@siddaramaiah) October 20, 2019
ತನ್ನ ಸಾವು ಬಯಸಿದವರಿಗೆ ಏಸುಕ್ರಿಸ್ತ ಹೇಳಿದ್ದನ್ನೇ ಶ್ರೀರಾಮುಲು ಅವರಿಗೆ ಹೇಳುವೆ:
"ಅವರನ್ನು ಕ್ಷಮಿಸಿಬಿಡು ತಂದೆಯೇ,
ಅವರೇನು ಮಾಡುತ್ತಿದ್ದಾರೆ ಎನ್ನುವುದು ಅವರಿಗೆ ತಿಳಿದಿಲ್ಲ" pic.twitter.com/cunQdpgzH7